×
Ad

ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಕೈತಪ್ಪುತ್ತೆ ಅನ್ನೋದು ಮೌಢ್ಯ: ಸಿಎಂ ಸಿದ್ದರಾಮಯ್ಯ

''ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೆ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಬಸವಣ್ಣನವರು 12ನೆ ಶತಮಾನದಲ್ಲೇ ಇಂತಹ ಮೌಢ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು''

Update: 2023-07-02 20:35 IST

ಬೆಂಗಳೂರು, ಜು.2: ‘ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಯೋಜಿಸಿದ್ದ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದಲ್ಲಿ ಬಸವಣ್ಣ ಕನಸು ಕಂಡಿದ್ದ ಸಮಾಜ ನಿರ್ಮಾಣವಾಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಎಲ್ಲ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನಮಾನ ಕಲ್ಪಿಸುವ ಆಶಯಕ್ಕಾಗಿ, ಇದೇ ಆಶಯ ನಮ್ಮ ಸರಕಾರದ್ದೂ ಆಗಿದೆ’ ಎಂದರು.

ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೆ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಬಸವಣ್ಣನವರು 12ನೆ ಶತಮಾನದಲ್ಲೇ ಇಂತಹ ಮೌಢ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ, ಶಾಸಕ ಶ್ರೀನಿವಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ, ಕೊಂಡಜ್ಜಿ ಮೋಹನ್ ಸೇರಿ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News