×
Ad

ಕಾವೇರಿ ವಿವಾದ | ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರ ನಿಯೋಗಕ್ಕೆ ಸಿಎಂ ಭರವಸೆ

Update: 2023-09-29 16:17 IST

ಬೆಂಗಳೂರು, ಸೆ. 29: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.

ʼʼಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆʼʼ ಎಂದು ವಿವರಿಸಿದರು.

ʼʼಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆʼʼ

ʼʼಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿ ಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರುʼʼ ಎಂದು ವಿವರಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News