ʼವಿಬಿ-ಜಿ ರಾಮ್ ಜಿʼ ರದ್ದುಪಡಿಸಿ ನರೇಗಾ ಪುನರ್ ಸ್ಥಾಪನೆಯಾಗುವವರೆಗೆ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ʼವಿಬಿ-ಜಿ ರಾಮ್ ಜಿʼ ರದ್ದುಪಡಿಸಿ ನರೇಗಾ ಪುನರ್ ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ 'ಮನರೇಗಾ ಬಚಾವ್ ಸಂಗ್ರಾಮ್" ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚೆಗೆ ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (MGNREGA) ಕಾಯ್ದೆಯನ್ನು ರದ್ದು ಮಾಡಿ, ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಶನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ತಿಳಿಸಿದರು.
2005 ರಲ್ಲಿ ಮನಮೋಹನ್ ಸಿಂಗ್ ಪ್ರದಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿಯೇ ಜಾರಿಗೆ ಬಂದ ಜನಪರ ಕಾಯ್ದೆಗಳಾಗಿದ್ದುವು ಎಂದರು.
ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ ಕೇಂದ್ರ ಸರಕಾರ, ಆರೆಸ್ಸೆಸ್ ನವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.
ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು
ಬಿಜೆಪಿಯವರು ಕಾಂಗ್ರೆಸ್ ನ ಜನಪರ ಗ್ಯಾರಂಟಿ ಯೋಜನೆಗಳ ಬಗ್ಗೆ ‘ವೋಟ್ ಗಾಗಿ ಮಾಡಿದ ಯೋಜನೆಗಳು’ ಎಂದು ಟೀಕಿಸುತ್ತಿದ್ದರು. ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ನರೇಗಾ ಯಿಂದ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಈ ಮೊದಲು ಕೆಲಸವನನ್ನು ನಿರ್ಧರಿಸಲಾಗುತ್ತಿತ್ತು. ಆದರೆ ಈಗ ಬಡವರ ಗ್ರಾಮೀಣ ಬಡಜನರ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು , ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.
ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ :
ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರಕಾರ ಹಾಗೂ ಕಾಂಗ್ರೆಸ್ ಪಕ್ಷ, ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಪುನರ್ ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.
ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ :
ಡಾ.ಬಿ.ಆರ್. ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು. ಗೋಡ್ಸೆ ಮಹಾತ್ಮಾಗಾಂಧಿಯವರ ಹತ್ಯೆಯನ್ನು ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ, ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ . ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ ರದ್ದತಿಯ ವಿರುದ್ಧ ಸರಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.
ಮುಂದಿನ ಬಜೆಟ್-ಗ್ರಾಮಪಂಚಾಯತ್ ಗಳಿಗೆ ಮಹಾತ್ಮಾ ಗಾಂಧಿ ಹೆಸರು :
ನರೇಗಾ ಯೋಜನೆಯ ಪುನರ್ ಸ್ಥಾಪನೆ ಹಾಗೂ ವಿಬಿ ಜಿ ರಾಮ್ ಜಿ ಯ ರದ್ದತಿಯನ್ನು ಒತ್ತಾಯಿಸಿ, ರಾಜಭವನಕ್ಕೆ ಮನವಿಯನ್ನು ತಲುಪಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಕಾಂಗ್ರೆಸ್ ನ ಈ ಉದ್ದೇಶಕ್ಕೆ ಸಹಕರಿಸಬೇಕು. ಮುಂದಿನ ಬಜೆಟ್ ನಲ್ಲಿ ಘೋಷಣೆಯಲ್ಲಿ 6000 ಗ್ರಾಮ ಪಂಚಾಯತಿಗಳ ಕಚೇರಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.