ರಕ್ಷಣಾ ರಾಜನಾಥ್ ಸಿಂಗ್ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ
ಹೊಸದಿಲ್ಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ರಕ್ಷಣಾ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ರಕ್ಷಣಾ ಕಾರಿಡಾರ್ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.65ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ರಕ್ಷಣಾ ಕಾರಿಡಾರ್ ಮಂಜೂರು ಮಾಡಿದರೆ, ಇದು ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪೂರಕ ಮಾಹಿತಿ ಒದಗಿಸಿದರು.
ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್, ಏಕಸ್, ಬಿಕಾರ್ ಏರೋಸ್ಪೇಸ್, ವಾಲ್ಚಂದ್ ನಗರ್ ಇಂಡಸ್ಟ್ರೀಸ್ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಗಮನಕ್ಕೆ ತರಲಾಯಿತು.
ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್ಎಎಲ್, ಕಾಲಿನ್ಸ್ ಏರೋಸ್ಪೇಸ್, ಡೈನಮ್ಯಾಟಿಕ್ ಟೆಕ್ನಾಲಜೀಸ್, ಸೆಂಟಮ್, ಸಾಸ್ಮೋಸ್, ಬೆಲ್ಲಾಟ್ರಿಕ್ಸ್ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್ಎಲ್ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಏರ್ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಇದೆ. ಈ ಭಾಗದಲ್ಲಿ ದೇಶದ ಏರ್ಕ್ರಾಫ್ಟ್ ಮತ್ತು ಸ್ಪೇಸ್ಕ್ರಾಫ್ಟ್ ವಲಯದ ಶೇ.25ರಷ್ಟು ತಯಾರಿಕೆ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಗಮನ ಸೆಳೆದರು.
ವಿಮಾನ ಮತ್ತು ಹೆಲಿಕಾಪ್ಟರ್ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ರಕ್ಷಣಾ ಕಾರಿಡಾರ್ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿತು. ರಾಜ್ಯದ ಮನವಿ ಸ್ವೀಕರಿಸಿದ ರಾಜನಾಥ್ ಸಿಂಗ್, ಇವುಗಳನ್ನು ಸೂಕ್ತವಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿದ್ದರು.
ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ರಕ್ಷಣಾ(ಡಿಫೆನ್ಸ್) ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಟನಲ್ ರಸ್ತೆ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿಯವರ ಸಮಯವನ್ನು ಕೇಳಿದ್ದು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನಾಳೆ(ಗುರುವಾರ) ಹೊಸದಿಲ್ಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಗೂ ಸಮಯವನ್ನು ಕೋರಲಾಗಿದ್ದು, ಸಾಧ್ಯವಾದರೆ ನಾಳೆ ಭೇಟಿಯಾಗುತ್ತೇನೆ ಎಂದು ಅವರು ಹೇಳಿದರು.