ಚಿತ್ರದುರ್ಗ | ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಚಿತ್ರ ಪ್ರದರ್ಶನ; ಪ್ರಕರಣ ದಾಖಲು
Update: 2023-10-11 13:44 IST
credit: prajavani.net
ಚಿತ್ರದುರ್ಗ: ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ 21 ದಿನಗಳ ಕಾಲ ಪೂಜೆ ಕೈಂಕರ್ಯಗಳನ್ನು ಮಾಡಲಾಗಿತ್ತು.ಕೊನೆದಿನ (ಅಕ್ಟೋಬರ್ 8 ರಂದು) ಬೃಹತ್ ಶೋಭಾಯಾತ್ರೆ ಮೆರವಣಿಗೆ ನಡೆದಿದ್ದು, ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆಯ ಚಿತ್ರವನ್ನು ಪ್ರದರ್ಶಿಸಲಾಗಿತ್ತು.
ಈ ಸಂಬಂಧ ನಗರದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಇದೀಗ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ನಲ್ಲಿ ಆರೋಪಿಗಳ ಹೆಸರು ಉಲ್ಲೇಖವಾಗಿಲ್ಲ.
ಶೋಭಾಯಾತ್ರೆ ಮೆರವಣಿಗೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಕೆ.ಸಿ.ವೀರೇಂದ್ರ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿದ್ದರು.