ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಜನತೆಯನ್ನೇ ಮರೆತಿರುವ ಸಿಎಂ, ಡಿಸಿಎಂ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ಜನರನ್ನು ಮತ್ತು ರಾಜ್ಯವನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಯ ಕಳೆಯುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರವನ್ನು ಆರಿಸಿ ತಂದಿರುವುದಕ್ಕಾಗಿ ಜನರು ಪಶ್ಚಾತಾಪಪಡುತ್ತಿದ್ದು ಈ ಸರ್ಕಾರವನ್ನು ಕಿತ್ತು ಹಾಕಲು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.ಪಡಿತರ ಆಹಾರ ವಿತರಣೆ ಮಾಡುವ ಲಾರಿಗಳಿಗೆ ಸುಮಾರು 250 ಕೋಟಿ ರೂ. ಬಾಕಿ ಇರುವುದು ಅಕ್ಷಮ್ಯ ಅಪರಾಧ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಯೋಜನೆಗಳಿಗೆ ಹಣ ಕೊಟ್ಟಿದ್ದೇವೆ. ಇವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅನೇಕ ಬಿಲ್ ಬಾಕಿ ಇತ್ತು, ಅದನ್ನು ನಮ್ಮ ಸರ್ಕಾರ ಬಂದು ತೀರಿಸಿತ್ತು. ಕೋವಿಡ್ ಸಂದರ್ಭದಲ್ಲಿಯೂ ಯಾವುದೇ ಹಣಕಾಸು ತೊಂದರೆಯಾಗದಂತೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ನನ್ನ ನೇತೃತ್ವದ ಸರ್ಕಾರದಲ್ಲಿಯೂ ಆರ್ಥಿಕವಾಗಿ ಸದೃಢವಾಗಿ ಕೆಲಸ ಮಾಡಿದ್ದರೂ ಕೂಡ ಈ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ವಿಫಲವಾಗಿ ಜನರಿಗೆ ದ್ರೋಹ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಬಡವರಿಗೆ ಆಹಾರ ಕೊಡದಿದ್ದರೆ ಬಡವರ ಪರಿಸ್ಥಿತಿ ಏನು, ಇವರು ಹದಿನೈದು ಕೆಜಿ ಕೊಡುವುದು ಹೋಗಲಿ ಹತ್ತು ಕೆಜಿಯನ್ನೂ ಕೊಡುತ್ತಿಲ್ಲ. ಅಕ್ಕಿಯ ಬದಲು ಕೊಡುತ್ತೇವೆ ಹಣ ಎಂದರು ಅದನ್ನೂ ಕೊಡುತ್ತಿಲ್ಲ. ಬರಿ ಸುಳ್ಳಿನ ಕಂತೆ ಹೇಳುತ್ತ ಈ ಸರ್ಕಾರ ಕಾಲ ಕಳೆಯುತ್ತಿದೆ. ಜನರಿಗೆ ಆಹಾರ ಪದಾರ್ಥ ಸಿಗುತ್ತಿಲ್ಲ. ಆರೋಗ್ಯ ವ್ಯವಸ್ಥೆ ಸರಿ ಇಲ್ಲ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ನೋಡಿದರೆ ಶಿಕ್ಷಣ ವ್ಯವಸ್ಥೆ ಸರಿ ಇಲ್ಲ. ಮೂಲ ಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರಿಗೂ ಹಣ ಬಿಡುಗಡೆಯಾಗುತ್ತಿಲ್ಲ ಎಂದರು.
ಹತ್ತು ಮಹಾನಗರ ಪಾಲಿಕೆಗಳ ಸಿಬ್ಬಂದಿ ಸಂಬಳ ನೀಡಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ನಗರಸಭೆ, ಪುರಸಭೆ ಉದ್ಯೋಗಿಗಳಿಗೆ ಸರ್ಕಾರ ಕೊಡಬೇಕಿರುವ ಹಣ ಕೊಡುತ್ತಿಲ್ಲ. ಪುರಸಭೆಯೇ ತನ್ನ ಹಣಕಾಸಿನ ವ್ಯವಸ್ಥೆಯಲ್ಲಿ ನೌಕರರ ಸಂಬಳ ನೀಡಬೇಕೆಂಬ ಆದೇಶ ಬಂದು ಒಂದು ವರ್ಷವಾಗಿದೆ. ಇದು ದುಸ್ಥಿತಿಯ ಸಂಕೇತ. ಮುಖ್ಯಮಂತ್ರಿಗಳು ಈ ಎಲ್ಲ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ತಕ್ಷಣ ಹಣ ಬಿಡುಗಡೆ ಮಾಡಬೇಕು' ಎಂದು ಆಗ್ರಹಿಸಿದರು.
ಸಿಎಂ ಮತ್ತು ಡಿಸಿಎಂ ನಡುವೆ ನಾನು ಸಿಎಂ ಸ್ಥಾನ ಬಿಡುವುದಿಲ್ಲ. ನಾನು ಸಿಎಂ ಆಗುತ್ತೇನೆ ಎಂಬ ಕುರ್ಚಿ ಕಚ್ಚಾಟದಲ್ಲಿ ಆಡಳಿತವನ್ನು ಸಂಪೂರ್ಣ ಮರೆತಿದ್ದಾರೆ. ಬಡವರು, ರೈತರು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಪ್ರವಾಹ ಹೆಚ್ಚಾಗಿದೆ. ಹೃದಯಾಘಾತದಲ್ಲಿ ಮಡಿದವರ ಸಂಖ್ಯೆ ಹೆಚ್ಚಾಗಿದೆ. ಎಲ್ಲ ಇಲಾಖೆಯಲ್ಲಿ ಅವ್ಯವಸ್ಥೆಗಳು ಗೋಚರಿಸುತ್ತಿದ್ದು, ಈ ಸರ್ಕಾರ ಇದ್ದೂ ಸತ್ತಂತೆ ಎಂದು ಹೇಳಿದರು.