ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡನೆಗೆ ತೀರ್ಮಾನ, ಒಂದು ಲಕ್ಷ ಕೋಟಿ ರೂ.ವೆಚ್ಚದಲ್ಲಿ ಯೋಜನೆ ಜಾರಿ : ಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ : ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆಗೆ ತೀರ್ಮಾನಿಸಲಾಗಿದ್ದು, ಕೇಂದ್ರ ಸರಕಾರಕ್ಕೆ ನಮ್ಮ ಸಮ್ಮತಿ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರವು ಇದನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಿ, 1 ಲಕ್ಷ ಕೋಟಿ ರೂ.ಯೋಜನೆ ಮಾಡಲಿದೆ. ಇದರಲ್ಲಿ ಶೇ.10ರಷ್ಟು ರಾಜ್ಯ ಸರಕಾರದ ಪಾಲು, ಶೇ.90ರಷ್ಟು ಕೇಂದ್ರ ಸರಕಾರ ಭರಿಸಲಿದೆ ಎಂದು ಹೇಳಿದರು.
ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ ಗೇಟ್ ತುಂಡರಿಸಿತ್ತು. ಆಗ ನಾವು ಒಂದೇ ವಾರದಲ್ಲಿ ಪರಿಸ್ಥಿತಿ ನಿಭಾಯಿಸಿದೆವು. ನಂತರ ನಾವು ಎಲ್ಲ 33 ಗೇಟ್ ಬದಲಾವಣೆ ಮಾಡಿದ್ದೇವೆ. ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ನೀರು ನಷ್ಟವಾಗುತ್ತಿದೆ ಎಂದು ಅವರು ತಿಳಿಸಿದರು.
ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಮೊದಲ ಬಾರಿಗೆ ಸಭೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ನಾವು ಪರಸ್ಪರ ಕಿತ್ತಾಡದೆ ರೈತರ ಬದುಕು ರಕ್ಷಣೆಗೆ ಕೇಂದ್ರದ ತಾಂತ್ರಿಕ ಸಮಿತಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿದ್ದು, ನಂತರ ನಾವು ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು. ಈ ಮಧ್ಯೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.
ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಜಿ ವರದಿಯಲ್ಲಿ ಗ್ಯಾರಂಟಿ ಯೋಜನೆ ದುರ್ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮಾಡುತ್ತಿದ್ದೇವೆ. ಸತ್ತವರ ಹೆಸರಿನಲ್ಲಿ ನೂರಾರು ಕೋಟಿ ಹಣ ಪಡೆದಿದ್ದಾರೆ. ಇದನ್ನು ತಡೆಯಲು, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಮರುಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲಿದೆ. ಸಿದ್ದರಾಮಯ್ಯ ಅವರ ಸರಕಾರದಲ್ಲಿ ನಾವು ತೀರ್ಮಾನ ಮಾಡಿದ ಯಾವುದೇ ಕಾರ್ಯಕ್ರಮ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ರೈತರ ಕೃಷಿ ವಿಮೆ ವಿಚಾರದಲ್ಲಿ ಮೋಸ ನಡೆಯುತ್ತಿದೆ ಎಂದು ಶಾಸಕರು ನಮ್ಮ ಗಮನ ಸೆಳೆದಿದ್ದಾರೆ. ಕಲಬುರಗಿಯಲ್ಲಿ ನಮಗೆ ಮಾಹಿತಿ ಬಂದಿದೆ. ರೈತರಿಗೆ ಹಣ ಸಿಗುತ್ತಿದೆಯೇ ಅಥವಾ ಮಧ್ಯವರ್ತಿಗಳ ಹಾವಳಿ ಇದೆಯೇ ಎಂದು ಪರಿಶೀಲನೆ ಮಾಡಲು ಬೆಂಗಳೂರಿನಲ್ಲಿ ಸಭೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿರುವುದರಿಂದ ಮೋಡ ಬಿತ್ತನೆ ವಿಚಾರವನ್ನು 10ಕ್ಕೂ ಹೆಚ್ಚು ಶಾಸಕರು ಪ್ರಸ್ತಾಪಿಸಿದ್ದು, ಇತ್ತೀಚೆಗೆ ಕೆಲವು ಶಾಸಕರು ತಾವೇ ಹಣ ಹಾಕಿ ಈ ಪ್ರಯೋಗ ಮಾಡಿ ಯಶಸ್ವಿಯಾಗಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ವರದಿ ತರಿಸಿಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ನುಡಿದರು.