ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ | ಕೇಂದ್ರ ಸರಕಾರದ ಮಾರ್ಗಸೂಚಿಗಳ ಅನ್ವಯ ತೆಗೆದುಕೊಂಡ ನಿರ್ಧಾರ : ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ಸರಕಾರ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ನಿರ್ಣಯವನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ.15 ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ ಎಂದರು.
ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಕೇಂದ್ರ ಸರಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು ಶೇ.10ಕ್ಕಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ ಶೇ.10ರಷ್ಟು ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ. ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ ಶೇ.15 ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್.ಸಿ, ಎಸ್,ಟಿ ಅಥವಾ ಒಬಿಸಿ ವರ್ಗಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಕಾನೂನು ಇಲಾಖೆಯ ವಿಸ್ತೃತ ಪರಾಮರ್ಷೆಯ ನಂತರ ಕೈಗೊಂಡ ತೀರ್ಮಾನವಾಗಿದ್ದು, ಇದು ಕಾನೂನಾತ್ಮಕವಾಗಿಯೂ ಸಮರ್ಪಕವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ. ರಾಷ್ಟ್ರ ಮಟ್ಟದಲ್ಲಿ ಶೇ.15 ಮೀಸಲಾತಿಯನ್ನು ಜಾರಿಗೊಳಿಸಿರುವ ಬಿಜೆಪಿ ಪಕ್ಷವು, ಇಂದು ಕರ್ನಾಟಕದಲ್ಲಿ ಕೇಂದ್ರದ ನೀತಿಯ ಮೂಲ ತತ್ವಗಳನ್ನೊಳಗೊಂಡ ನಿರ್ಣಯವನ್ನು ಟೀಕಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ತಿರುಚಿದ ಮಾಹಿತಿ ಹರಡಿ ಕೋಮು ಬಣ್ಣ ಬಳಿಯುವ ಮೂಲಕ ಬಡವರ ಉದ್ಧಾರದ ಕಾರ್ಯಗಳಿಗೆ ಅಡ್ಡಿಯಾಗದೆ, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ತಮ್ಮ ಸಂಕುಚಿತ ರಾಜಕೀಯವನ್ನು ಬದಿಗೊತ್ತಿ ನಮ್ಮ ಬೆಂಬಲಕ್ಕೆ ನಿಲ್ಲಲಿ ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯದ ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಕೇಂದ್ರ ಸರಕಾರವು ಈ ಮಾರ್ಗಸೂಚಿಗಳನ್ನು ಯಾಕೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂಬುದನ್ನು ಮೊದಲು ವಿವರಿಸಬೇಕು. ಬೇರೆ ರಾಜ್ಯಗಳೂ ಅದನ್ನೇ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಬೇಕು ಎಂದು ಹೇಳಿದ್ದಾರೆ.
ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದವನ್ನು ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನು ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಒಂದರಲ್ಲೇ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಆ ಪೈಕಿ ಹೆಚ್ಚಿನವರು ಭೂರಹಿತರು ಮತ್ತು ಮನೆಗಳ ತುರ್ತು ಅಗತ್ಯತೆ ಇರುವವರಾಗಿದ್ದಾರೆ. ಅಲ್ಪಸಂಖ್ಯಾತ ಅರ್ಜಿದಾರರು ಇಲ್ಲದ ಪಂಚಾಯತಿಗಳಲ್ಲಿನ ಉಪಯೋಗವಾಗದೆ ಉಳಿದ ವಸತಿ ಹಂಚಿಕೆಗಳನ್ನು ಅತಿ ಅಗತ್ಯವಿರುವೆಡೆಗೆ ಮರುಹಂಚಿಕೆ ಮಾಡುವ ಕ್ರಮವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
"ಕರ್ನಾಟಕದಲ್ಲಿ ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಒತ್ತುಕೊಡುತ್ತಿದೆ. ಬಿಜೆಪಿಯು ಹರಡುತ್ತಿರುವ ದ್ವೇಷಪೂರಿತ ಮತ್ತು ವಿಭಜನಕಾರಿ ರಾಜಕಾರಣವನ್ನು ನಾವು ತಿರಸ್ಕರಿಸುತ್ತೇವೆ. ನಮ್ಮ ಆಡಳಿತ ಮಾದರಿಯು ನ್ಯಾಯ, ಸಮಾನತೆ ಮತ್ತು ಸಹಾನುಭೂತಿಯ ಆಶಯಗಳನ್ನು ಹೊಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಂದು ಬಡ ಕುಟುಂಬಕ್ಕೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ"
- ಸಿದ್ದರಾಮಯ್ಯ, ಮುಖ್ಯಮಂತ್ರಿ