×
Ad

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

Update: 2025-08-07 20:06 IST

ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ಮತ ಕಳವು, ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಹೀಗಾಗಿ, ಈ ಕೂಡಲೆ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗುರುವಾರ ಈ ಕುರಿತು ಮಾಧ್ಯಮ ಪ್ರಕಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು? ಎನ್ನುವುದಕ್ಕೆ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ. ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಕೇಂದ್ರ ಸರಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ.ಅದರಲ್ಲೂ, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರುವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ ಎಂದು ಸಿದ್ದರಾಮಯ್ಯ ಆಪಾದಿಸಿದ್ದಾರೆ.

ನಕಲಿ ಮತದಾರರು..!

ಒಟ್ಟು 11,965 ಮಂದಿ ನಕಲಿ ಮತದಾರರು ಈ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ್ದಾರೆ. ಒಬ್ಬನೇ ಮತದಾರ ನಾಲ್ಕಾರು ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವುದು, ಒಬ್ಬನೇ ಮತದಾರ ಈ ಕ್ಷೇತ್ರದ ಜೊತೆ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕೂಡ ಮತ ಚಲಾವಣೆ ಮಾಡಿರುವುದು. ಹೀಗೆ ಮತದಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ನಕಲಿ ವಿಳಾಸ ಹೊಂದಿರುವ ಮತದಾರರು..!

ಒಟ್ಟು 40,009 ಮಂದಿ ನಕಲಿ ವಿಳಾಸ ಹೊಂದಿರುವ ಮತದಾರರನ್ನು ಈ ಕ್ಷೇತ್ರದಲ್ಲಿ ಪತ್ತೆ ಮಾಡಲಾಗಿದೆ. ಮನೆಯ ನಂಬರ್ ‘0' ಎಂದು ನಮೂದಾಗಿರುವ ಸಾವಿರಾರು ವಿಳಾಸವೇ ಇಲ್ಲದ ಮತದಾರರು, ತಂದೆ ಮತ್ತು ಪತಿಯ ಹೆಸರು ಇರುವ ಜಾಗದಲ್ಲಿ ಅರ್ಥವೇ ಇಲ್ಲದಂತೆ ಮನಸೋ ಇಚ್ಛೆ ಇಂಗ್ಲೀಷ್‌ ಅಕ್ಷರಗಳನ್ನು ನಮೂದಿಸಿರುವುದು ಮತ್ತು ಅಸ್ತಿತ್ವದಲ್ಲಿ ಇಲ್ಲದ ವಿಳಾಸಗಳನ್ನು ನೀಡಿರುವುದು. ಹೀಗೆ ನಕಲಿ ವಿಳಾಸ ನೀಡಿ ಮತಗಳ್ಳತನ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಒಂದೇ ವಿಳಾಸದಲ್ಲಿ ಹಲವು ಮತದಾರರ ವಾಸ..!

ಒಟ್ಟು 10,452 ಮಂದಿ ಮತದಾರರು ಎಲ್ಲರೂ ಒಟ್ಟಿಗೆ ಬೆರಳೆಣಿಕೆಯಷ್ಟು ಸಂಖ್ಯೆಯ ವಿಳಾಸದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ. ಒಂದೇ ಮನೆಯ ವಿಳಾಸ ನೀಡಿ 80 ಜನ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ. 68 ಮಂದಿ ಮತದಾರರ ಗುರುತಿನ ಚೀಟಿಯಲ್ಲಿ ಒಂದು ಖಾಸಗಿ ಕ್ಲಬ್‍ನ ವಿಳಾಸವಿದೆ. ಈ ಬಗ್ಗೆ ಅಲ್ಲಿ ವಿಚಾರಣೆ ನಡೆಸಿದಾಗ ಗುರುತಿನ ಚೀಟಿ ಹೊಂದಿರುವ ಯಾರೊಬ್ಬರೂ ಅಲ್ಲಿ ವಾಸವಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗಿದೆ.

ಗುರುತು ಇಲ್ಲದಂತಹ ಮತದಾರರ ಫೋಟೋಗಳು..!

ಒಟ್ಟು ಈ ಕ್ಷೇತ್ರದಲ್ಲಿ 4,132 ಮಂದಿಯ ಗುರುತಿನ ಚೀಟಿಯಲ್ಲಿ ಫೋಟೋಗಳೇ ಲಭ್ಯವಿಲ್ಲ ಅಥವಾ ಫೋಟೋಗಳನ್ನು ಗುರುತಿಸಲು ಸಾಧ್ಯವಾಗದಂತೆ ಅತ್ಯಂತ ಚಿಕ್ಕದಾಗಿ ನಮೂದಿಸಲಾಗಿದೆ. ಅಂದರೆ ಗುರುತೇ ಹಿಡಿಯಲಾಗದವರು ಕೂಡ ಮತದಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ 33,692 ಮಂದಿಯ ವಯಸ್ಸು 60 ರಿಂದ 90 ವರ್ಷಕ್ಕೂ ಮೇಲ್ಪಟ್ಟಿದೆ. ಹೊಸ ಅಥವಾ ಯುವ ಮತದಾರರು ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂಬ ಮಾತನ್ನು ಆಗಾಗ್ಗೆ ಬಿಜೆಪಿಯವರೇ ಹೇಳುತ್ತಿರುತ್ತಾರೆ. ವಾಸ್ತವದಲ್ಲಿ 98 ವರ್ಷ, 89 ವರ್ಷದ ವಯೋವೃದ್ಧರು ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಿರುವುದು ಈ ಹಗರಣದ ಆಳ, ಅಗಲವನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News