ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
‘ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭʼ
ಬೆಂಗಳೂರು : ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘70ನೆ ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ಆಯೋಜಿಸಿದ್ದ ‘ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಮಾತನಾಡಿದ ಅವರು, ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ, ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಅವರು ಹಾರೈಸಿದರು.
ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರಾಜ್, ಪ್ರೊ. ರಾಜೇಂದ್ರ ಚೆನ್ನಿ, ಡಾ.ಎಚ್.ಎಲ್.ಪುಷ್ಪಾ ಸೇರಿದಂತೆ ಸೇರಿದಂತೆ ಮತ್ತಿತರರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕಿ ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.