ಮರ್ಯಾದೆಗೇಡು ಹತ್ಯೆ ತಡೆಗೆ ಕಾಯ್ದೆ ರಚನೆ : ಸಿಎಂ ಸಿದ್ದರಾಮಯ್ಯ
ಜನರಾಜ್ಯೋತ್ಸವ-2025 ಕಾರ್ಯಕ್ರಮ
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದಾಗಿ ಕಾಯ್ದೆ ರೂಪಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರವಿವಾರ ನಗರದ ಅರಮನೆ ಮೈದಾನದಲ್ಲಿ ಕನ್ನಡ ಚಳುವಳಿಗಾರರ ಸಮಿತಿ ಆಯೋಜಿಸಿದ್ದ ಜನರಾಜ್ಯೋತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ನಡೆದಿರುವುದು ಖಂಡನೀಯ. ಈ ಸಂಬಂಧ ಮರ್ಯಾದೆಗೇಡು ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿ ಬಂದಿದ್ದು, ಇದನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಮೀಸಲಾತಿ: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು. ಕರ್ನಾಟಕಕ್ಕೆ ಅನ್ಯಾಯವಾದಾಗ ಒಗ್ಗಟ್ಟಿನಿಂದ ಹೊರಡಬೇಕು.ಅದೇ ರೀತಿ, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಮಹದಾಯಿ ಯೋಜನೆಗೆ ಕೇಂದ್ರ ಸರಕಾರದಿಂದ ಪರಿಸರ ತೀರುವಳಿ ಸಿಕ್ಕಿದ ಕೂಡಲೇ ಜಾರಿ ಮಾಡಲಾಗುವುದು ಎಂದ ಅವರು, ಇನ್ನೊಂದೆಡೆ, ಕೇಂದ್ರ ಸರಕಾರ ಕೃಷ್ಣಾ ಮೂರನೆ ಹಂತ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರದ ಮಲತಾಯಿ ಧೋರಣೆಯನ್ನು ಕನ್ನಡಿಗರು ಖಂಡಿಸಬೇಕು ಎಂದು ಅವರು ಹೇಳಿದರು.