ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿರುವ ಸಿದ್ದರಾಮಯ್ಯ; ಖಚಿತಪಡಿಸಿದ ಸಚಿವ ಎಚ್.ಕೆ. ಪಾಟೀಲ್
ಎರಡು ಗಂಟೆಗಳ ಬ್ರೇಕ್ಫಾಸ್ಟ್ ಸಭೆ ಬಳಿಕ ಗರಿಗೆದರಿದ ರಾಜಕೀಯ ಚಟುವಟಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ , ಎಚ್.ಕೆ. ಪಾಟೀಲ್
ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಸುಮಾರು ಎರಡು ಗಂಟೆಗಳ ಬ್ರೇಕ್ಫಾಸ್ಟ್ ಸಭೆ ಅಂತ್ಯವಾಗಿದೆ.
ಸಭೆ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಲು ಸಲಹೆ ನೀಡಿದ್ದಾರೆ ಎಂದು ಸಚಿವ ಎಚ್.ಕೆ. ಪಾಟೀಲ್ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 2.45ರ ಸುಮಾರಿಗೆ ಲೋಕಭವನಕ್ಕೆ ತೆರಳುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು. ಇದಕ್ಕಾಗಿ ಅವರು ಸಮಯ ನಿಗದಿಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಕೆ ಕುರಿತು ಕುತೂಹಲ ಮೂಡಿಸಿದೆ. ಕೌಟುಂಬಿಕ ಅಗತ್ಯತೆಗಾಗಿ ರಾಜ್ಯಪಾಲರು ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸುವ ಸಾಧ್ಯತೆ ಇದೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಜಿ. ಪರಮೇಶ್ವರ್, ರಾಮಲಿಂಗ ರೆಡ್ಡಿ, ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.