×
Ad

ಆರ್‌ಸಿಬಿ ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ ಸಿದ್ದರಾಮಯ್ಯ

Update: 2025-06-11 20:22 IST

ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ ಆರ್‌ಸಿಬಿ ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಅವರನ್ನು ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬುಧವಾರ ಗೌರಿಬಿದನೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೂ.4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ.ಬಿಯ ವತಿಯಿಂದ ಆರ್.ಸಿ.ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಆಹ್ವಾನ ನೀಡಿ ಮನವಿ ಮಾಡಿಕೊಂಡರು ಎಂದು ಹೇಳಿದರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಚಾರವಾಗಿದ್ದು ತಪ್ಪು. ನನ್ನ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು, ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅದರಮತೆ, ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು. ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳ ಪರಿಹಾರವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕನ್ನಡದ ಅಭಿವೃದ್ಧಿಗೆ ಅನುದಾನ ಲಭ್ಯವಿದೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ವಿಧಾನಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಇನ್ನೂ ಹೆಚ್ಚು ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಹೊಸ ಜಿಲ್ಲೆ ರಚನೆ - ಚರ್ಚಿಸಿ ತೀರ್ಮಾನ: ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮತ್ತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ ಜೂ.19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಮಾವಿನ ಬೆಲೆ ಕುಸಿತವಾಗಿರುವುದರಿಂದ ಬೆಂಬಲ ಬೆಲೆ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಮಾಡಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News