×
Ad

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ರಚನೆ : ಡಿ.ಕೆ.ಶಿವಕುಮಾರ್

Update: 2026-06-04 20:04 IST

ಬೆಂಗಳೂರು : ಕರಾವಳಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಸಧ್ಯದಲ್ಲಿಯೇ ಹೊಸ ಪ್ರವಾಸೋದ್ಯಮ ನೀತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.

ಗುರುವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸರಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಕಾರ್ಯವನ್ನು ರಾಜ್ಯ ಸರಕಾರ ಮಾಡಲಿದೆ ಎಂದು ತಿಳಿಸಿದರು.

ಅದೇ ರೀತಿ, ಖಾಸಗಿ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಗಳನ್ನು ನಮ್ಮ ಯುವ ಜನಾಂಗಕ್ಕೆ ದೊರೆಯುವಂತೆ ಮಾಡಲು ಉದ್ಯೋಗ ವಿನಿಮಯ ಕೇಂದ್ರ ಪ್ರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ. ಖಾಸಗಿ ವಲಯದಲ್ಲಿ ಲಭ್ಯವಿರುವ ಉದ್ಯೋಗವಕಾಶಗಳನ್ನು ನಮ್ಮ ಯುವಕ, ಯುವತಿಯರಿಗೆ ಲಭ್ಯವಾಗಿಸುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ. ಪ್ರತಿ ಸಂಘಕ್ಕೆ ತಲಾ 10ಲಕ್ಷ ರೂ., ಅನುದಾನ ಒದಗಿಸಲಾಗುವುದು. ಇದಕ್ಕಾಗಿ ಒಟ್ಟು 1000 ಕೋಟಿ ಅನುದಾನ ಒದಗಿಸಲಾಗುವುದು. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಯೋಜನೆ ರೂಪಿಸಬೇಕು. ರಾಜ್ಯದಲ್ಲಿ ಖಾಲಿಯಿರುವ ಸರಕಾರಿ ಹುದ್ದೆಗಳನ್ನು ಕಾಲಮಿತಿಯೊಳಗಾಗಿ ನೇಮಕಾತಿ ಮಾಡುವ ಬಗ್ಗೆ ವೇಳಾಪಟ್ಟಿಯನ್ನು ಆಯಾ ಇಲಾಖೆಗಳು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News