ಸಂಪುಟ ಸೇರ್ಪಡೆಗೆ ಶಾಸಕರ ನಡುವೆ ಪೈಪೋಟಿ
ಬೆಂಗಳೂರು : ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಇದರ ಬೆನ್ನಲ್ಲೆ ನೂತನ ಸಚಿವ ಸಂಪುಟ ಸೇರ್ಪಡೆಗೆ ಹಿರಿಯ ಮತ್ತು ಕಿರಿಯ ಶಾಸಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಜೂನ್ 3ರಂದು ರಾಜಭವನದ ಗಾಜಿನ ಮನೆಯಲ್ಲಿ ಸರಳವಾಗಿ ನೂತನ ಮುಖ್ಯಮಂತ್ರಿ ಪ್ರಯಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಡಿ.ಕೆ.ಶಿವಕುಮಾರ್ ಅವರೊಂದಿಗೆ ಹತ್ತಕ್ಕೂ ಹೆಚ್ಚು ಮಂದಿ ನೂತನ ಸಚಿವ ಸಂಪುಟ ಸೇರ್ಪಡೆಯಾಗುವ ಸಾಧ್ಯತೆಗಳಿವೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನ್ಯ ಕಾರ್ಯನಿಮಿತ್ತ ಮೇ 31 ಮತ್ತು ಜೂನ್ 1ರಂದು ಊರಿನಲ್ಲಿ ಇರುವುದಿಲ್ಲ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಜೂನ್ 3ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡಲಾಗಿದೆ.
ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದ ಕ್ರಿಯಾಶೀಲ ಹಾಗೂ ಹಿರಿಯರಾದ 10 ಮಂದಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಕೆ.ಜೆ.ಜಾರ್ಜ್, ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಯು.ಟಿ.ಖಾದರ್ ಅಥವಾ ಎನ್.ಎ.ಹಾರಿಸ್, ದಿನೇಶ್ ಗುಂಡೂರಾವ್, ಲಕ್ಷ್ಮಣ್ ಸವದಿ, ರಾಮಲಿಂಗಾರೆಡ್ಡಿ, ರೂಪಕಲಾ ಶಶಿಧರ್ ಸೇರಿದಂತೆ ಹಲವು ಮಂದಿಯ ಹೆಸರುಗಳು ಕೇಳಿಬರುತ್ತಿವೆ.
ಗಣ್ಯರಿಗೆ ಆಹ್ವಾನ: ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಕೇರಳ, ತೆಲಂಗಾಣ ಸಹಿತ ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನಿಸಲಾಗುತ್ತಿದೆ.
ಕ್ರಿಯಾಶೀಲರಾದ ಡಿಕೆಶಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೆ ಚರುಕುಗೊಂಡಿರುವ ಡಿ.ಕೆ.ಶಿವಕುಮಾರ್ ಅವರು, ಬಿಡುವಿಲ್ಲದೆ ಹೆಚ್ಚು ಕ್ರಿಯಾಶೀಲರಾಗಿದ್ದು, ತಮ್ಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೊದಲೇ ‘ಲೋಕಭವನ’ಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಪ್ರಯಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಮಯ ಹಾಗೂ ಇತರ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಆರೇಳು ತಿಂಗಳಿನಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬಿಕ್ಕಟ್ಟಿನ ಪ್ರಹಸನಕ್ಕೆ ತೆರೆ ಬಿದ್ದಿದೆ. ನೂತನ ಮುಖ್ಯಮಂತ್ರಿ ಆಯ್ಕೆಯ ಬಳಿಕ ಹೊಸ ಸರಕಾರ ರಚನೆಯ ಪ್ರಕ್ರಿಯೆಗಳು ಚುರುಕುಗೊಂಡಿವೆ. ಶೀಘ್ರದಲ್ಲೆ ಸಚಿವ ಸಂಪುಟ ರಚನೆಯಾಗಲಿದೆ. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಕಾಂಗ್ರೆಸ್ ವರಿಷ್ಟರು ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆಗಳಿವೆ.