ಬೆಂಗಳೂರು: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಮವಾರ ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್‍ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಣ ನೀತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಆಡಳಿತವಿರುವ 4 ರಾಜ್ಯಗಳ ಸಿಎಂಗಳ ಸಭೆ ದಿಲ್ಲಿಯಲ್ಲಿ ನಿಗದಿಯಾಗಿತ್ತು, ಆದರೆ ಕೊನೆ ಕ್ಷಣದಲ್ಲಿ ಅದು ರದ್ದಾಯಿತು.

ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು. ವಿಶ್ವದ 80ಕ್ಕೂ ಹೆಚ್ಚು ಪ್ರಸಿದ್ಧ ವಿಶ್ವ ವಿದ್ಯಾನಿಲಯಗಳು ಕರ್ನಾಟಕದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತಿ ತೋರುತ್ತಿವೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ಮೋದಿ ಭೇಟಿಯಾಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ಅದು ಬೆಂಗಳೂರು ಮತ್ತು ಕರ್ನಾಟಕದ ಮೂಲಕವೇ ಸಾಧ್ಯ ಎಂದು ಹೇಳಿದ್ದೆ ಎಂದು ಸ್ಮರಿಸಿದರು.

ಗುರು ಸಮಾನರು: ಶಿಕ್ಷಣ ಕ್ಷೇತ್ರಕ್ಕೆ ಎಂ.ಎಸ್ ರಾಮಯ್ಯ ಕುಟುಂಬದ ಕೊಡುಗೆ ದೊಡ್ಡದು. ರಾಮಯ್ಯ ಅವರು ಬೆಂಗಳೂರು ಮತ್ತು ಕರ್ನಾಟಕ ಬೆಳೆಯಲು ಕೊಡುಗೆ ನೀಡಿದ್ದಾರೆ. ಜಯರಾಂ ಹಾಗೂ ನನ್ನ ಪರಿಚಯ 40ವರ್ಷಗಳಷ್ಟು ಹಳೆಯದು. ಜಯರಾಂ ಅವರನ್ನು ನಾನು ಗುರು ಎಂದು ಗೌರವಿಸುತ್ತೇನೆ. ಅವರಿಂದ ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ ಎಂದು ಅವರು ತಿಳಿಸಿದರು.

ಎಂ.ಎಸ್.ರಾಮಯ್ಯ ಸಂಸ್ಥೆಯು ಜೆಎಸ್‍ಡಬ್ಲ್ಯೂ ಸಮೂಹದ ಸಜ್ಜನ್ ಜಿಂದಾಲ್ ಅವರಂತಹ ಹಲವು ಉದ್ಯಮಿಗಳನ್ನು ಮತ್ತು ನಾಯಕರನ್ನು ಸೃಷ್ಟಿಸಿದೆ. ಇಲ್ಲಿನ ಹಳೆಯ ವಿದ್ಯಾರ್ಥಿಗಳ ಸಮೂಹ ತುಂಬಾ ದೊಡ್ಡದು. ರಾಮಯ್ಯ ಸಂಸ್ಥೆಯ ಪಕ್ಕದಲ್ಲೇ ಇರುವ ಭಾರತೀಯ ವಿಜ್ಞಾನ ಸಂಸ್ಥೆ ಆರಂಭವಾಗಲು ಸ್ವಾಮಿ ವಿವೇಕಾನಂದ, ಟಾಟಾ ಹಾಗೂ ಮೈಸೂರು ಮಹಾರಾಜರ ದೂರದೃಷ್ಟಿ ಕಾರಣ. ವಿವೇಕಾನಂದ ಹಾಗೂ ಟಾಟಾ ಅವರ ನಡುವಿನ ಸಂವಾದದ ಕಾರಣಕ್ಕೆ ಮಹತ್ವದ ಸಂಸ್ಥೆಗೆ ಮೈಸೂರು ಮಹಾರಾಜರು ಜಾಗ ನೀಡಿದರು ಎಂದು ಅವರು ನುಡಿದರು.

ಉದ್ಯಮಿಗಳ ನೆಚ್ಚಿನ ಆಯ್ಕೆ: ಎಸ್.ಎಂ.ಕೃಷ್ಣ ಸರಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾಗ ಅಮೆರಿಕ ರಾಯಭಾರಿಯವರು ಹೇಳಿದಂತೆ, ಅಮೆರಿಕಾದ 9/11ರ ದುರಂತದ ನಂತರ, ಸುರಕ್ಷಿತ ಸ್ಥಳಕ್ಕಾಗಿ ಅಮೆರಿಕವು ದಿಲ್ಲಿ, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಗರಗಳ ಸಮೀಕ್ಷೆ ನಡೆಸಿತ್ತು. ಚೆನ್ನೈನ ಹವಾಮಾನ, ಮುಂಬೈ-ಪುಣೆಗಳ ಜನದಟ್ಟಣೆ ಹಾಗೂ ಹೈದರಾಬಾದ್‍ನ ಸ್ಥಿತಿಗಳನ್ನು ಪರಿಶೀಲಿಸಿದ ನಂತರ, ಕೇವಲ ಜ್ಞಾನ, ಸಂಸ್ಕøತಿ ಮತ್ತು ಪ್ರತಿಭೆ ಹೆಚ್ಚಿರುವ ಬೆಂಗಳೂರನ್ನು ಆಯ್ಕೆ ಮಾಡಲಾಯಿತು ಎಂದು ಅವರು ಸ್ಮರಿಸಿದರು.

ದಾವೋಸ್‍ಗೆ ತೆರಳಿದಾಗ ಹೆಚ್ಚಿನ ಉದ್ಯಮಿಗಳು ಬೆಂಗಳೂರಿನ ಬಗ್ಗೆ ಹೆಚ್ಚಿನ ಆಸಕ್ತಿವಹಿಸುತ್ತಿದ್ದರು. ಏಕೆಂದರೆ ಬೆಂಗಳೂರಲ್ಲಿ 1ಡಾಲರ್ ವೆಚ್ಚಕ್ಕೆ ಮುಂಬೈನಲ್ಲಿ ಮೂರುವರೆ ಡಾಲರ್‍ಗೆ ಸಮ. ಅಷ್ಟು ವೆಚ್ಚ ಹೆಚ್ಚಳವಾಗಿದೆ ಅಲ್ಲಿ. ಎಲ್ಲರೂ ಬೆಂಗಳೂರನ್ನು ಮೊದಲ ಆಯ್ಕೆಯನ್ನಾಗಿ ನೋಡುತ್ತಿದ್ದಾರೆ. ಅಂತರರಾಷ್ಟ್ರೀಯ ನಾಯಕರೂ ಬೆಂಗಳೂರನ್ನು ಮೆಚ್ಚುತ್ತಿದ್ದಾರೆ. ಇಲ್ಲಿನ ಶಿಕ್ಷಣ ಗುಣಮಟ್ಟವೂ ಚೆನ್ನಾಗಿದೆ ಎಂದರು.

ನ್ಯೂಝಿಲೆಂಡ್‍ಗೆ ತೆರಳಿದ್ದಾಗ ನಾನು ಗಮನಿಸಿದ ಸಂಗತಿ ಎಂದರೆ, ಅಲ್ಲಿ ನಮ್ಮ ಪದವಿ ಕೇಳುವುದಿಲ್ಲ. ಬದಲಾಗಿ ಕೌಶಲ್ಯ ಕೇಳುತ್ತಾರೆ. ಕೌಶಲ್ಯ ಶಿಕ್ಷಣ ಪಡೆದು ಈ ದೇಶದ ಏಳಿಗೆಗೆ ಕೊಡುಗೆ ಕೊಡಬೇಕು ಎಂದ ಅವರು, ನಾನು ಹುಟ್ಟಿನಿಂದ ರೈತ, ವೃತ್ತಿಯಿಂದ ಉದ್ಯಮಿ, ಆಯ್ಕೆಯಿಂದ ಶಿಕ್ಷಣ ತಜ್ಞ ಹಾಗೂ ಆಸಕ್ತಿಯಿಂದ ರಾಜಕಾರಣಿ. ಆದರೆ ನನ್ನ ಹೃದಯ ಇರುವುದು ಶಿಕ್ಷಣ ಕ್ಷೇತ್ರದಲ್ಲಿ. ಅದೇ ರೀತಿ ಜಯರಾಂ ಶಿಕ್ಷಣ ಕ್ಷೇತ್ರಕ್ಕೇ ತಮ್ಮ ಜೀವನ ಮುಡುಪಾಗಿಟ್ಟವರು. ಜಯರಾಂ ಅವರು ಇತಿಹಾಸ ಓದುವವರಲ್ಲ, ಇತಿಹಾಸ ಸೃಷ್ಟಿಸುವವರು ಎಂದು ಬಣ್ಣಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor