‘ಗ್ರಾಮೀಣ ಕುಡಿಯುವ ನೀರು ಯೋಜನೆ’ | ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸದ ಗುತಿಗೆದಾರರು ಕಪ್ಪುಪಟ್ಟಿಗೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಗಳನ್ನು ಗುತ್ತಿಗೆ ಪಡೆದು ಕೆಲವು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಗಳಿಗೆ ಸೂಚನೆ ನೀಡಿದರು.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಗ್ರಾಮೀಣ ನೀರು ಸರಬರಾಜು ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂಜಿನಿಯರ್ಗಳು ನಿಧಾನ ಪ್ರವೃತ್ತಿಯನ್ನು ಬಿಟ್ಟು, ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ನಿರ್ದಿಷ್ಟ ಸಮಯದಲ್ಲಿ ಅನುಷ್ಠಾನಕ್ಕೆ ತರುವಲ್ಲಿ ಆದ್ಯತೆ ನೀಡಬೇಕೆಂದು ಆದೇಶಿಸಿದರು.
ಏಕಗ್ರಾಮ ಹಾಗೂ ಬಹುಗ್ರಾಮ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಮುಕ್ತಾಯಗೊಂಡ ನಂತರ ಅಗೆದ ರಸ್ತೆಗಳನ್ನು ಯಥಾಸ್ಥಿತಿಗೆ ತರುತ್ತಿಲ್ಲವೆಂಬ ದೂರುಗಳು ಬಹಳಷ್ಟು ಬರುತ್ತಿದ್ದು, ಈ ಸಂಬಂಧದಲ್ಲಿ ಇಂಜಿನಿಯರ್ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ ಅವರು, ನೀರು ಸರಬರಾಜು ಕಾಮಗಾರಿ ಮುಗಿದ ನಂತರ ಆದ್ಯತೆಯ ಮೇಲೆ ರಸ್ತೆಗಳನ್ನು ಸರಿಪಡಿಸುವಲ್ಲಿ ಗಮನ ಹರಿಸಲು ಸೂಚಿಸಿದರು.
ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡುವ ಮೊದಲು ಅವರಲ್ಲಿನ ಯಂತ್ರೋಪಕರಣಗಳು ಮುಂತಾದ ಸಾಮಥ್ರ್ಯವನ್ನು ಪರೀಕ್ಷಿಸಬೇಕು. ಏಕಗ್ರಾಮ ಹಾಗೂ ಬಹುಗ್ರಾಮ ನೀರು ಸರಬರಾಜು ಯೋಜನೆಗಳಿಗೆ ಮಂಜೂರಾತಿ ಪಡೆದು, ಕಾರ್ಯಗತವಾಗುವ ಸಮಯದಲ್ಲಿ ಎದುರಾಗುವ ಅರಣ್ಯಭೂಮಿ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ, ಯೋಜನೆಗಳನ್ನು ವೀಳಂಬ ಮಾಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಯೋಜನಾ ವರದಿ ಸಿದ್ಧಪಡಿಸುವಾಗಲೇ ಎದುರಾಗುವ ಅಡ್ಡಿ ಆತಂಕಗಳನ್ನು ಗಮನಿಸಬೇಕು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಂಗಳಲ್ಲಿ ಮೂರು ದಿನ ಪಂಚಾಯತ್ ರಾಜ್, ಗ್ರಾಮೀಣ ನೀರು ಸರಬರಾಜು ಹಾಗೂ ನರೇಗಾ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಬೇಕು, ಜಿಲ್ಲಾ ಮಟ್ಟದಲ್ಲೇ ಸಿಇಒಗಳು ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಇಡೀ ದಿನ ನಡೆದ ಸಭೆಯಲ್ಲಿ ಜಿಲ್ಲಾವಾರು ಪ್ರಗತಿಯನ್ನು ಪರಿಶೀಲಿಸಿ, ಕಡಿಮೆ ಪ್ರಗತಿ ಸಾಧಿಸಿದ ಇಂಜಿನಿಯರ್ಗಳ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ಸಾಕಷ್ಟು ಪ್ರಮಾಣದಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸುವಲ್ಲಿ ಆಲಸ್ಯ ತೋರುವ ಇಂಜಿನಿಯರ್ ಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು, ನೀರು ಕಲುಷಿತಗೊಂಡು ಗ್ರಾಮಗಳಲ್ಲಿ ಸಮಸ್ಯೆ ತಲೆದೋರಿದಲ್ಲಿ ಇಂಜಿನಿಯರ್ಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.