×
Ad

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2025-12-20 14:10 IST

ಡಿ.ಕೆ.ಶಿವಕುಮಾರ್

ಬೆಂಗಳೂರು : “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದಿಲ್ಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದಿಲ್ಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

ಮಂಗಳವಾರ ದಿಲ್ಲಿ ಪ್ರಯಾಣ :

ದಿಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದಿಲ್ಲಿಗೆ ಹೋಗುತ್ತಿದ್ದು, ಆಗ ದಿಲ್ಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News