×
Ad

ಪ್ರತ್ಯೇಕ ರಾಜ್ಯದ ಬೇಡಿಕೆ ತಾರತಮ್ಯ ನಿವಾರಣೆಗೆ ಪರಿಹಾರ ಅಲ್ಲ: ಸಿಎಂ ಸಿದ್ದರಾಮಯ್ಯ

Update: 2023-12-15 16:49 IST

ಬೆಳಗಾವಿ: ಸರಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಶುಕ್ರವಾರ ಉತ್ತರಿಸಿದ ಅವರು, ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗಲೂ ಹೋರಾಟ ಮಾಡಿದವರಿದ್ದಾರೆ ಎಂದರು.

ಹೈದರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ ವಿಶೇಷ ಸ್ಥಾನಮಾನ ಸಿಗಲು ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ , ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದು ಮುಖ್ಯಮಂತ್ರಿ ಸ್ಮರಿಸಿದರು.

ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟದ 5 ತಾಲೂಕುಗಳು ಸೇರಿದಂತೆ ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ತಾಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ, ವೆಚ್ಚವಾಗಿದ್ದು 8330 ಕೋಟಿ ರೂ.ಗಳು. ಮುಂದಿನ ವರ್ಷದಿಂದ 5 ಸಾವಿರ ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲೂಕುಗಳಿಗೂ ಅನುದಾನ ನೀಡಲಾಗುವುದು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News