×
Ad

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಅರ್ಜಿಯಲ್ಲೇ‌ನಿದೆ?

Update: 2026-01-01 20:28 IST

ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳೆಂಬ ಕಾರಣಕ್ಕೆ ಅಂದಾಜು 300 ಮನೆಗಳನ್ನು ನೆಲಸಮ ಮಾಡಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹಾನಾ ಹಾಗೂ ಆರೀಫ್ ಬೇಗಂ ಪಿಐಎಲ್ ಸಲ್ಲಿಸಿದ್ದು, ರಾಜ್ಯ ಸರಕಾರ, ಬಿಬಿಎಂಪಿ, ಬೆಂಗಳೂರು ಪೊಲೀಸ್​ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿಯು ಇನ್ನಷ್ಟೇ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಾಗಿದೆ.

ಅರ್ಜಿಯಲ್ಲೇ‌ನಿದೆ?

ವಾಸಿಂ ಹಾಗೂ ಫಕೀರ್ ಕಾಲನಿಯಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಕೆಡವುದಕ್ಕೂ ಮುನ್ನ ಯಾವುದೇ ನೋಟಿಸ್​ ಜಾರಿ ಮಾಡಿಲ್ಲ. ನಮ್ಮ ಅಹವಾಲುಗಳನ್ನು ಆಲಿಸಿಲ್ಲ. ಬಡಾವಣೆಯಲ್ಲಿ ನೆಲೆಸಿರುವ ಹಲವು ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಬಹುತೇಕರು ತಮ್ಮ ಮನೆಗಳಿಗೆ ಸಂಬಂಧಿಸಿದಂತೆ ದಾಖಲೆ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಬಿಬಿಎಂಪಿ ಅಧಿಕಾರಿಗಳು ಅಕ್ರಮ ಒತ್ತುವರಿ ಎಂಬ ಆರೋಪದಲ್ಲಿ ಮನೆಗಳನ್ನು ತೆರವು ಮಾಡುವುದಕ್ಕೂ ಮುನ್ನ ಶೋಕಾಸ್​ ನೋಟಿಸ್​ ಜಾರಿ ಮಾಡಿ, 15 ದಿನಗಳ ಕಾಲಾವಕಾಶ ನೀಡಬೇಕು. ಬುಲ್ಡೋಜರ್ ಬಳಕೆ ಮಾಡಿ ಮನೆ ನೆಲಸಮಗೊಳಿಸಬಾರದು, ತೆರವು ಪ್ರಕ್ರಿಯೆ ಪ್ರಾರಂಭಕ್ಕೂ ಮುನ್ನ ಲಿಖಿತ ನೋಟಿಸ್​ ಜಾರಿ ಮಾಡಿ, ಅವರರನ್ನು ವಿಚಾರಣೆಗೊಳಪಡಿಸಲು ಸಮಯಾವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಆದರೆ, ಸರಕಾರದ ಅಧಿಕಾರಿಗಳು ಸುಪ್ರೀಂಕೋರ್ಟ್​ ಆದೇಶಕ್ಕೆ ತದ್ವಿರುದ್ದವಾಗಿ ವರ್ತಿಸಿ, ಮನೆಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಘಟನೆಯಿಂದ ಬಡಾವಣೆ ಸುತ್ತಮುತ್ತಲಿನ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನೂರಾರು ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕಗಳು, ಹಾಲ್​ ಟಿಕೆಟ್​ಗಳು ನಾಶವಾಗಿದ್ದು, ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಪಿಐಎಲ್‌ನಲ್ಲಿ ಹೇಳಲಾಗಿದ್ದು, ಫಕೀರ್​ ಮತ್ತು ವಾಸಿಂ ಕಾಲನಿಯ ಎಲ್ಲ ನಿರಾಶ್ರಿತರಿಗೆ ಅಲ್ಲಿಂದ 5 ಕಿ. ಮೀ. ವ್ಯಾಪ್ತಿಯಲ್ಲಿ ಪುನರ್ವಸತಿ ಅಥವಾ ಪರ್ಯಾಯ ವಸತಿ ಒದಗಿಸಬೇಕು. ಅದಕ್ಕಾಗಿ ಸಮೀಕ್ಷೆ ನಡೆಸಬೇಕು. ಹಲವು ವರ್ಷಗಳ ಕಾಲ ಶ್ರಮಿಸಿ, ನಿರ್ಮಿಸಿರುವ ಮನೆಗಳನ್ನು ಕೆಡವಿರುವುದರಿಂದ ಪರಿಹಾರ ಒದಗಿಸಬೇಕು. ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿದೆ.

ಮನೆ ಕಳೆದುಕೊಂಡು ಬೀದಿ ಪಾಲಾಗಿರುವವರಿಗೆ ಸಾಂಕ್ರಾಮಿಕ ರೋಗ ತಗುಲುವ ಸಾಧ್ಯತೆಯಿದ್ದು, ಸ್ಥಳದಲ್ಲಿ ತಾತ್ಕಾಲಿಕ ವೈದ್ಯಕೀಯ ಶಿಬಿರ ಪ್ರಾರಂಭಿಸಿ, ತಕ್ಷಣ ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು. ತೆರವು ಕಾರ್ಯಚರಣೆ ವೇಳೆ ಮೂಲ ಹಾಲ್​ ಟಿಕೆಟ್​ ನಾಶವಾಗಿದ್ದು, ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಗದಂತಹ ವಿದ್ಯಾರ್ಥಿಗಳಿಗೆ ನಕಲು ಹಾಲ್ ಟಿಕೆಟ್​ ಪ್ರತಿ ಕಲ್ಪಿಸಿ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಬೇಕು. ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪುಸ್ತಕ, ನೋಟ್​ ಬುಕ್​, ಅಧ್ಯಯನ ಸಾಮಗ್ರಿ ಮತ್ತು ಸಮವಸ್ತ್ರ ಒದಗಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ನ್ಯಾಯಾಂಗ ನಿಂದನೆಯಡಿ ಕ್ರಮಕ್ಕೆ ಮನವಿ:

ಸುಪ್ರೀಂಕೋರ್ಟ್​ ಮಾರ್ಗಸೂಚಿ ಉಲ್ಲಂಘಿಸಿ, ಮನೆ ಕೆಡವಿರುವ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು. ನಷ್ಟ ಮತ್ತು ಹಾನಿಗೆ ಅಧಿಕಾರಿಗಳನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಬೇಕು. ಸಂತ್ರಸ್ತರಾಗಿರುವ ಅಂಗವಿಕಲರು, ಮಹಿಳೆಯರು ಮತ್ತು ವೃದ್ಧರಿಗೆ ತಕ್ಷಣದಿಂದಲೇ ಶುದ್ದ ಕುಡಿಯುವ ನೀರು ಮತ್ತು ಪೌಷ್ಠಿಕ ಆಹಾರ ಪೂರೈಸಬೇಕು. ಪುರುಷರು ಮತ್ತು ಮಹಿಳೆಯರಿಗೆ ತಾತ್ಕಾಲಿಕವಾಗಿ ಪ್ರತ್ಯೇಕ ಶೌಚಗೃಹಗಳನ್ನು ನಿರ್ಮಿಸಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಭದ್ರತೆ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News