ಧರ್ಮಸ್ಥಳ ಪ್ರಕರಣ : 200 ಕೋಟಿ ಷಡ್ಯಂತ್ರದ ಆರೋಪ ಮಾಡಿದ್ದ ಚಿನ್ನಯ್ಯನ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ ಕುರಿತ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶಿಸುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನ (ಚಿನ್ನಯ್ಯ) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಪ್ರಕರಣದ ಅಂತಿಮ ವರದಿಯನ್ನು 2025ರ ನವೆಂಬರ್ನಲ್ಲೇ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಇದೇ ಜುಲೈ 15ರಂದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿ ಸಲ್ಲಿಸಲಾಗಿದೆ ಎಂದು ಎಸ್ಐಟಿ ಪರ ವಕೀಲರ ಹೇಳಿಕೆ ಪರಿಗಣಿಸಿ ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತು.
ಪ್ರಕರಣ ಸಂಬಂಧ ಶೀಘ್ರ ಕ್ರಮ ಕೈಗೊಳ್ಳಲು ಎಸ್ಐಟಿಗೆ ನಿರ್ದೇಶಿಸುವಂತೆ ಕೋರಿ ಮಂಡ್ಯ ಮೂಲದ, ಪ್ರಸ್ತುತ ಧರ್ಮಸ್ಥಳ ವಾಸ್ತವ್ಯ ಹೊಂದಿರುವ ಸಿ.ಎನ್. ಚಿನ್ನ (50) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಎಸ್ಐಟಿ ಪರ ಹಾಜರಾದ ಎಸ್ಪಿಪಿ ಬಿ.ಎನ್. ಜಗದೀಶ್ ಅವರು, ಶೀಘ್ರ ತನಿಖೆ ಪೂರ್ಣಗೊಳಿಸಲು ಎಸ್ಐಟಿಗೆ ನಿರ್ದೇಶಿಸಬೇಕು ಎನ್ನುವುದು ಅರ್ಜಿದಾರರ ಮನವಿಯಾಗಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2025ರ ನವೆಂಬರ್ನಲ್ಲೇ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸಲಾಗಿದೆ. ಹೆಚ್ಚುವರಿಯಾಗಿ ಎಫ್ಎಸ್ಎಲ್ ವರದಿಯನ್ನು 2026ರ ಜುಲೈ 15ರಂದು ಸಲ್ಲಿಸಲಾಗಿದೆ. ಆದ್ದರಿಂದ, ಅರ್ಜಿಯಲ್ಲಿ ಪರಿಗಣಿಸಬಹುದಾದ ಯಾವುದೇ ವಿಚಾರಗಳು ಉಳಿದಿಲ್ಲ. ಇಲ್ಲಿ ಅರ್ಜಿಯನ್ನು ಬಾಕಿ ಉಳಿಸಿಕೊಳ್ಳುವ ಅಗತ್ಯವಿಲ್ಲ. ಒಂದು ವೇಳೆ, ಅಂತಿಮ ವರದಿಯ ಬಗ್ಗೆ ಆಕ್ಷೇಪಣೆಗಳಿದ್ದರೆ ಯಾರು ಬೇಕಿದ್ದರೂ ಆ ವರದಿಯನ್ನು ಪ್ರಶ್ನಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನು ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಪ್ರಕಾರ 2025ರ ನವೆಂಬರ್ ತಿಂಗಳಿನಲ್ಲೇ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು ಹಾಗೂ ಎಫ್ಎಸ್ಎಲ್ ವರದಿ ಸಲ್ಲಿಕೆ ಮಾತ್ರ ಬಾಕಿ ಇತ್ತು. ಆ ಎಫ್ಎಸ್ಎಲ್ ವರದಿಯನ್ನು ಜುಲೈ 15ರಂದು ಸಲ್ಲಿಸಲಾಗಿದೆ. ಇದರೊಂದಿಗೆ, ಅಂತಿಮ ವರದಿ ಸಲ್ಲಿಸುವ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಹಾಲಿ ಅರ್ಜಿ ಹಾಗೂ ಅದರಲ್ಲಿನ ಮನವಿಗಳು ನಿರರ್ಥಕವಾಗಿವೆ ಎಂದು ಎಸ್ಪಿಪಿ ತಿಳಿಸಿದ್ದಾರೆ. ಅವರ ಈ ಹೇಳಿಕೆ ದಾಖಲಿಸಿಕೊಂಡು, ಅರ್ಜಿ ವಿಲೇವಾರಿ ಮಾಡಲಾಗಿದೆ ಎಂದು ಆದೇಶಿಸಿತು.
ಮಧ್ಯಂತರ ಅರ್ಜಿಗಳೂ ಇತ್ಯರ್ಥ:
ಇದೇ ವೇಳೆ, ಅರ್ಜಿಯಲ್ಲಿ ತಮ್ಮ ವಿರುದ್ಧ ಅನಗತ್ಯ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ ಎಂದು ಆಕ್ಷೇಪಿಸಿ ಚಿತ್ರದುರ್ಗದ ರಮಾ ನಾಗರಾಜ್ ಹಾಗೂ ಜಯಂತ್ ಎಂಬುವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳನ್ನೂ ನ್ಯಾಯಾಲಯ ಇತ್ಯರ್ಥಪಡಿಸಿದೆ.
ರಿಟ್ ಅರ್ಜಿಯಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಧ್ಯಂತರ ಅರ್ಜಿದಾರರ ಮನವಿಯಾಗಿದೆ. ಅರ್ಜಿಯಲ್ಲಿ ಅಥವಾ ಇನ್ನಾವುದೇ ರೀತಿಯಲ್ಲಿ ಮಾಡಲಾದ ಸುಳ್ಳು ಹೇಳಿಕೆಯಿಂದ ಮಧ್ಯಂತರ ಅರ್ಜಿದಾರರಿಗೆ ಅನ್ಯಾಯವಾಗಿದ್ದರೆ, ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಅವರಿಗೆ ಸದಾ ಮುಕ್ತ ಅವಕಾಶವಿರುತ್ತದೆ. ಅರ್ಜಿಯಲ್ಲಿ ಅವರ ವಿರುದ್ಧ ಮಾಡಲಾದ ಆರೋಪಗಳ ಕುರಿತು ಈ ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಅರ್ಜಿಯಲ್ಲಿ ಆರೋಪಗಳನ್ನು ಮಾಡಿದ್ದ ಚಿನ್ನಯ್ಯ:
ಪ್ರಕರಣದಲ್ಲಿ ನನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, ಸುಮಾರು 200 ಕೋಟಿ ರೂ. ಗಳ ಷಡ್ಯಂತ್ರವಾಗಿದೆ ಎಂದು ಅರ್ಜಿಯಲ್ಲಿ ಗಂಭೀರ ಆರೋಪ ಮಾಡಿದ್ದ ಚಿನ್ನಯ್ಯ, ಷಡ್ಯಂತ್ರದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್ಗಳಾದ ಎಂ.ಡಿ. ಸಮೀರ್, ಅಜಯ್, ದಿನೇಶ್ ಸೇರಿದಂತೆ ಹಲವರ ಪಾತ್ರದ ಬಗ್ಗೆ ಉಲ್ಲೇಖಿಸಿದ್ದಾರೆ. ಇದಲ್ಲದೆ, ಬಹುಭಾಷಾ ನಟ ಪ್ರಕಾಶ್ ರಾಜ್ ಹೆಸರನ್ನೂ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದ.
ಧರ್ಮಸ್ಥಳದಲ್ಲಿ ಈ ಹಿಂದೆ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನನ್ನನ್ನು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠ್ಠಲ್ ಗೌಡ, ಜಯಂತ್ ಹಾಗೂ ಮತ್ತಿತರರು ಸಂಪರ್ಕಿಸಿ, ಧರ್ಮಸ್ಥಳದಲ್ಲಿ ಸಾವಿರಾರು ಹೆಣಗಳನ್ನು ಹೂಳಲಾಗಿದೆ ಎಂದು ಸುಳ್ಳು ಹೇಳಿಕೆ ನೀಡುವಂತೆ ಒತ್ತಡ ಹೇರಲಾಗಿತ್ತು. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯಿಂದ ನನ್ನನ್ನು ಜಯಂತ್ ಎಂಬಾತನ ಮನೆಗೆ ಕರೆದೊಯ್ದು, ಅಲ್ಲಿ ಅಯ್ಯಪ್ಪ ಸ್ವಾಮಿ ಟವಲ್ ಮೇಲೆ ಮಾನವನ ತಲೆಬುರುಡೆ, ಮಣ್ಣು ಮತ್ತು ಅರ್ಧ ಬಾಟಲಿ ನೀರನ್ನು ಇಟ್ಟು, ತಲೆಬುರುಡೆಯನ್ನು ಕೈಯಲ್ಲಿ ಹಿಡಿಯುವಂತೆ ಹೆದರಿಸಲಾಗಿತ್ತು. ತಲೆ ಬುರುಡೆ ಮುಟ್ಟುವ ರೀತಿಯಲ್ಲಿ ಫೋಟೋಗಳನ್ನು ತೆಗೆಯಲಾಗಿತ್ತು. ನಂತರ ವಕೀಲರಾದ ಕೆ.ವಿ. ಧನಂಜಯ್ ಅವರ ಕಚೇರಿಗೆ ಕರೆದೊಯ್ಯಲಾಗಿತ್ತು ಎಂದು ಚಿನ್ನಯ್ಯ ಅರ್ಜಿಯಲ್ಲಿ ವಿವರಿಸಿದ್ದ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ನನ್ನನ್ನು ಕೂಡಿಹಾಕಲಾಗಿತ್ತು. ರಾತ್ರಿ ವೇಳೆ ಗಿರೀಶ್ ಮಟ್ಟಣ್ಣವರ್ ಹಾಸಿಗೆ ಮೇಲೆ ಮಲಗುತ್ತಿದ್ದರೆ, ನನ್ನನ್ನು ನೆಲದ ಮೇಲೆ ಮಲಗಿಸಿ ಅವರ ಕೈಕಾಲು ಹಾಗೂ ತಲೆ ಮಸಾಜ್ ಮಾಡುವಂತೆ ಒತ್ತಾಯಿಸಲಾಗುತ್ತಿತ್ತು. ತಪ್ಪಿಸಿಕೊಂಡು ಹೋಗದಂತೆ ಪ್ರದೀಪ್ ಎಂಬಾತ ಕಾವಲು ಕಾಯುತ್ತಿದ್ದ. ಯೂಟ್ಯೂಬ್ ಚಾನೆಲ್ನ ಅಜಯ್ ಹಾಗೂ ಮತ್ತೊಬ್ಬ ಯೂಟ್ಯೂಬರ್ ಎಂ.ಡಿ. ಸಮೀರ್ ಎಂಬುವವರು ನನ್ನಿಂದ ಬಲವಂತವಾಗಿ 30-35 ವಿಡಿಯೊ ಹೇಳಿಕೆಗಳನ್ನು ರೆಕಾರ್ಡ್ ಮಾಡಿಸಿದ್ದರು ಎಂದು ರಿಟ್ ಅರ್ಜಿಯಲ್ಲಿ ಚಿನ್ನಯ್ಯ ವಿವರಿಸಿದ್ದ.