ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶದ ವದಂತಿ; ಯಾರೂ ಭಯಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
"ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಲು ನಿರ್ದೇಶನ"
PC : freepik/ದಿನೇಶ್ ಗುಂಡೂರಾವ್
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳು ಕಂಡುಬಂದಿವೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ವದಂತಿಗೆ ಜನರು ಭಯಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಮೊಟ್ಟೆಗಳ ಬಗೆಗೆ ಉಂಟಾಗಿರುವ ಸಂಶಯಕ್ಕೆ ಅನುಸಾರವಾಗಿ ಪರೀಕ್ಷೆ, ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಇದೇ ರೀತಿಯಲ್ಲಿ ಈ ಹಿಂದೆ ಮೊಟ್ಟೆ ವಿಚಾರದಲ್ಲಿ ವದಂತಿ ಹರಡಿದಾಗ ನಡೆಸಿದ್ದ ಪರೀಕ್ಷೆಗಳಲ್ಲಿ ಮೊಟ್ಟೆಯಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶಗಳು ಕಂಡುಬಂದಿರಲಿಲ್ಲ. ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆಯಿದೆ. ನಾಗರೀಕರು ನಿರ್ಭೀತಿಯಿಂದ ಇರಬೇಕು ಎಂದು ಅವರು ಕೋರಿದರು.