‘ಮೇಕೆದಾಟು ಕೆಲಸ ಮುಂದುವರಿಸುತ್ತೇವೆ’; ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ : ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್
ಬೆಂಗಳೂರು : ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಕಷ್ಟ ಕಾಲದಲ್ಲಿ ಅವರ ಪಾಲಿನ ನೀರನ್ನು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ ಸುಪ್ರೀಂ ಕೋರ್ಟಿನ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದರು.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ನೀರಿನ ಬಳಕೆಗಾಗಿ ‘ನಮ್ಮ ನೀರು, ನಮ್ಮ ಹಕ್ಕು' ಎಂದು ಪಾದಯಾತ್ರೆ ಮಾಡಿದೆವು. ನಂತರ ರಾಜ್ಯದ ಜನ ನಮ್ಮ ಕೈಗೆ ಅಧಿಕಾರ ನೀಡಿದರು. ನಾವು ಅಧಿಕಾರಕ್ಕೆ ಬಂದ ನಂತರ ಕಾನೂನು ಹೋರಾಟ ಮಾಡಿದೆವು ಎಂದು ತಿಳಿಸಿದರು.
ಈ ವೇಳೆ ವಿರೋಧ ಪಕ್ಷಗಳು ಅನೇಕ ವ್ಯಾಖ್ಯಾನ ಮಾಡಿದವು. ತಮಿಳುನಾಡಿನವರು ಈ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಬೇಗ ತೀರ್ಮಾನವಾಗಬೇಕು ಎಂದು ನಾವು ಕಾನೂನು ಒತ್ತಡ ಹಾಕಿದೆವು. ಅದರಂತೆ ಸುಪ್ರೀಂ ಕೋರ್ಟಿನ ವಿಶೇಷ ಪೀಠ ವಿಚಾರಣೆ ನಡೆಸಿ, ಇಂದು ತೀರ್ಪು ಪ್ರಕಟಿಸಿದೆ ಎಂದು ಶಿವಕುಮಾರ್ ತಿಳಿಸಿದರು. ಕಾನೂನು ಚೌಕಟ್ಟಿನಲ್ಲಿ ಅಗತ್ಯ ಇಲಾಖೆಗಳ ಅನುಮತಿ: ಈ ವಿಚಾರ ನ್ಯಾಯಾಲಯದಲ್ಲಿ ತೀರ್ಮಾನ ಮಾಡುವ ವಿಚಾರವಲ್ಲ. ಕರ್ನಾಟಕವು ತಮಿಳುನಾಡು ಪಾಲಿನ 177 ಟಿಎಂಸಿ ನೀರು ಬಿಡಲೇಬೇಕು ಎಂದು ನಿರ್ದೇಶನ ನೀಡಿ, ತಮಿಳುನಾಡಿನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಸುಪ್ರೀಂ ಕೋರ್ಟಿನ ಮಾರ್ಗದರ್ಶನಕ್ಕೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದ ನೆಲದಲ್ಲಿ ಅಣೆಕಟ್ಟು ನಿರ್ಮಿಸುವ ನಮ್ಮ ಯೋಜನೆಯನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.
ಈ ಯೋಜನೆ ಸಂಬಂಧ ಎಲ್ಲ ತೀರ್ಮಾನಗಳನ್ನು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಈ ವಿಚಾರವಾಗಿ ಮತ್ತೆ ನ್ಯಾಯಾಲಯದ ಮುಂದೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಇನ್ನು ಕಾನೂನು ಚೌಕಟ್ಟಿನಲ್ಲಿ ಈ ಯೋಜನೆಗೆ ಅಗತ್ಯ ಇಲಾಖೆಗಳಿಂದ ಅನುಮತಿ ಪಡೆಯಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
ನಾವು ಈಗಾಗಲೇ ಮೇಕೆದಾಟು ಕಚೇರಿಯನ್ನು ಹಾರೋಬೆಲೆಯಲ್ಲಿ ಪ್ರಾರಂಭಿಸಿದ್ದೇವೆ. ಈ ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಕಂದಾಯ ಭೂಮಿಯನ್ನು ನೀಡಲು ಸ್ಥಳ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಈ ವರ್ಷ ತಮಿಳುನಾಡಿಗೆ 299 ಟಿಎಂಸಿ ನೀರು ಹರಿಸಲಾಗಿದೆ: ನಾವು ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಹರಿಸಬೇಕು. ಈ ವರ್ಷ ನ.13ರ ವೇಳೆಗೆ 148 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಈವರೆಗೆ ನಾವು 299 ಟಿಎಂಸಿ ನೀರು ಹರಿಸಿದ್ದೇವೆ. ಹೆಚ್ಚುವರಿ ನೀರು ಸಮುದ್ರ ಪಾಲಾಗಿದೆ. ತಮಿಳುನಾಡಿಗೂ ಬಳಸಿಕೊಳ್ಳಲು ಆಗಿಲ್ಲ. ನಾವು ಈ ಎಲ್ಲ ಮಾಹಿತಿಗಳನ್ನು ನ್ಯಾಯಾಲಯದ ಮುಂದೆ ಇಟ್ಟಿದ್ದೆವು. ಇದೇ ಕಾರಣಕ್ಕೆ ಕಳೆದ ವಾರ ನಾನು ದಿಲ್ಲಿಗೆ ಹೋಗಿ, ನಮ್ಮ ಕಾನೂನು ತಂಡದ ಜೊತೆ ಚರ್ಚೆ ಮಾಡಿ, ನಮ್ಮ ನಿಲುವು ಸ್ಪಷ್ಟಪಡಿಸಿದ್ದೆ ಎಂದು ಅವರು ಹೇಳಿದರು.
ಸಂಸದರ ನಿಯೋಗ: ಸಂಸತ್ ಅಧಿವೇಶನ ಆರಂಭವಾದ ಬಳಿಕ ಕೇಂದ್ರ ಸರಕಾರದ ಮೇಲೆ ಒತ್ತಡ ತರಲು ಜಲ ಶಕ್ತಿ ಸಚಿವ ಹಾಗೂ ಪ್ರಧಾನಿ ಭೇಟಿಗೆ ರಾಜ್ಯದ ಸಂಸದರನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತೇನೆ. ನ್ಯಾಯಾಲಯದ ಈ ತೀರ್ಮಾನದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಎಲ್ಲರೂ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆ ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ಯಾವಾಗಲೇ ನೀರಿನ ಕೊರತೆ ಉಂಟಾದರೂ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟು ನೆರವಾಗಲಿದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು.
ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದು, ಈ ಯೋಜನೆಯಲ್ಲಿ ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ, ಎಷ್ಟು ಗಿಡಗಳು ನಾಶವಾಗಲಿದೆ ಎಂದು ಲೆಕ್ಕ ಹಾಕಿಸಿದ್ದೇನೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಿ, ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಆಮೂಲಕ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಶುಕ್ರವಾರ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ: ರಾಜ್ಯದ ನೀರಾವರಿ ಯೋಜನೆಗಳು, ನ್ಯಾಯಾಲಯಗಳ ತೀರ್ಪುಗಳು, ನಮ್ಮ ರಾಜ್ಯದ ಯೋಜನೆಗಳ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ, ನಾನು ನೀರಿನ ಹೆಜ್ಜೆ ಎಂಬ ಪುಸ್ತಕ ರಚಿಸಿದ್ದು, ನ.14ರಂದು ಸಂಜೆ ಈ ಪುಸ್ತಕ ಬಿಡುಗಡೆಯಾಗಲಿದೆ. ಈ ಪುಸ್ತಕ ಬಿಡುಗಡೆಗೆ ಮುನ್ನುಡಿಯಾಗಿ ಈ ಆದೇಶ ಬಂದಿದೆ. ನ.15ರಂದು ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದ್ದು, ಅದರಲ್ಲಿ ಭಾಗವಹಿಸಲು ದಿಲ್ಲಿಗೆ ಪ್ರಯಾಣ ಮಾಡುತ್ತಿದ್ದೇನೆ. ನಂತರ ಡಿ.1ರ ನಂತರ ಸಂಸತ್ ಅಧಿವೇಶನ ನಡೆಯಲಿದ್ದು, ನಮ್ಮ ಅಧಿವೇಶನ ಡಿ.8ರಿಂದ ಆರಂಭಿಸಲಾಗುವುದು. ಈ ಮಧ್ಯದಲ್ಲಿ ಸಂಸತ್ ಸದಸ್ಯರ ಬೆಂಬಲದೊಂದಿಗೆ ನಮ್ಮ ಮುಂದಿನ ಹೆಜ್ಜೆ ಇಡುತ್ತೇವೆ.
-ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ