ʼನಾಯಕತ್ವ ಬದಲಾವಣೆʼ ವಿಚಾರ | ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ : ಡಿ.ಕೆ.ಶಿವಕುಮಾರ್
"ನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ ಐದು ಕಿ.ಮೀ. ಪಾದಯಾತ್ರೆ"
ಡಿ.ಕೆ.ಶಿವಕುಮಾರ್
ಹೊಸದಿಲ್ಲಿ : ‘ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಾಯಕತ್ವ ಬದಲಾವಣೆ ಸಂಬಂಧ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ರವಿವಾರ ದಿಲ್ಲಿಯ ಕರ್ನಾಟಕ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರ ಬಗ್ಗೆ ನಾನು ಏಕೆ ಬಹಿರಂಗಗೊಳಿಸಬೇಕು. ನಾವು ಇಲ್ಲಿಗೆ ಬರುವುದೇ ಸರಕಾರದ ಕೆಲಸಕ್ಕೆ, ಪಕ್ಷದ ಕೆಲಸಕ್ಕೆ, ನಮ್ಮ ರಾಜಕೀಯಕ್ಕೆ ಎಂದು ಹೇಳಿದರು.
‘ನಾವು ರಾಜಕಾರಣಿಗಳು. ರಾಜಕಾರಣಿಗಳು ಏನು ರಾಜಕಾರಣ ಮಾಡಬೇಕೋ ಅದನ್ನು ಎಲ್ಲ ರಾಜಕಾರಣಿಗಳು ಮಾಡುತ್ತಾರೆ. ಇದರಲ್ಲಿ ಏನೂ ತಪ್ಪಿಲ್ಲ. ನಾವುಗಳು ನಮ್ಮ ಅನುಕೂಲಕ್ಕೆ ಯಾರನ್ನು ಭೇಟಿ ಮಾಡಬೇಕೋ ಅವರನ್ನು ಕೇಳಿರುತ್ತೇವೆ, ಭೇಟಿ ಮಾಡುತ್ತೇವೆ. ನೀವು (ಮಾಧ್ಯಮಗಳು) ಏಕೆ ಇದನ್ನು ದೊಡ್ಡದು ಮಾಡುತ್ತೀರಿ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿ ಕ್ಷೇತ್ರದಲ್ಲಿ 5 ಕಿ.ಮೀ. ಪಾದಯಾತ್ರೆ:
‘ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ಐದು ಕಿ.ಮೀ. ಪಾದಯಾತ್ರೆ ನಡೆಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ನಿರ್ಣಯವನ್ನು ಕೈಗೊಳ್ಳಲಾಗುವುದು. ಅಲ್ಲದೆ, ಅಲ್ಲೇ ಸಭೆ ನಡೆಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
ಪಿಸಿಸಿಯ ಎಲ್ಲ ಅಧ್ಯಕ್ಷರುಗಳ ಸಭೆ ಕರೆಯಲಾಗಿತ್ತು. ನಾನು ಸಭೆಯಲ್ಲಿ ಪಾಲ್ಗೊಂಡಿದ್ದೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರೂ ಭಾಗವಹಿಸಿದ್ದರು. ಪಾದಯಾತ್ರೆ ವಿಚಾರ ಹಾಗೂ ಹೋರಾಟ ಮಾದರಿ ಬಗ್ಗೆ ಈ ಮೊದಲೇ ತಿಳಿಸಲಾಗಿತ್ತು. ಇಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಸಭೆಯಲ್ಲಿ ನೀಡಿದ ಆದೇಶಗಳನ್ನು ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.
‘ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾವು ಹೋರಾಟ ಮಾಡುತ್ತೇವೆ. ಈಗಾಗಲೇ ಪಂಚಾಯತಿ ಸದಸ್ಯರುಗಳ ಸಭೆ ನಡೆಸಲಾಗಿದೆ. ಶಾಸಕರ, ಪರಿಷತ್ ಸದಸ್ಯರ, ಪಕ್ಷದ ಪದಾಧಿಕಾರಿಗಳ, ಸಂಸದರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಲಾಗಿದೆ. ಸಂಘಟನಾ ಕಾರ್ಯದರ್ಶಿಯವರು, ಉಸ್ತುವಾರಿಗಳು ರಾಜ್ಯಕ್ಕೆ ಭೇಟಿ ನೀಡುವ ಸೂಚನೆ ನೀಡಿದ್ದಾರೆ’ ಎಂದು ಶಿವಕುಮಾರ್ ವಿವರ ನೀಡಿದರು.