ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಹೆಸರನ್ನು ನಾಮಕಾರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ.ಅದರಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ಕಾಲೇಜಿಗೆ ಹೆಗಡೆ ಅವರ ಹೆಸರಿಡಲಾಗುವುದು. ಜತೆಗೆ, ಗ್ರಾಮೀಣ ಆಡಳಿತಕ್ಕೆ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನದಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯಿತಿ ಪ್ರಶಸ್ತಿ’ ನೀಡುವ ಕಾರ್ಯಕ್ರಮ ರೂಪಿಸುವಂತೆ ಇಲಾಖೆ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಮತ್ತು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರಿಡಲು ತೀರ್ಮಾನಿಸಿರುವುದಾಗಿಯೂ ಪ್ರಕಟಿಸಿದರು.

ರಾಮಕೃಷ್ಣ ಹೆಗಡೆ ಅವರು ಕೇವಲ ಅಧಿಕಾರ ನಡೆಸಿದ ನಾಯಕನಲ್ಲ. ಪಂಚಾಯತಿಯಿಂದ ಸಂಸತ್ತಿನವರೆಗೆ ಹೊಸ ನಾಯಕತ್ವವನ್ನು ಸೃಷ್ಟಿಸಿದ ನಾಯಕ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕದ ಪ್ರಯೋಗಗಳು ದೇಶಕ್ಕೆ ಮಾದರಿಯಾಗಿದ್ದವು. ನಂತರ ರಾಜೀವ್ ಗಾಂಧಿ ಸರಕಾರದ ಅವಧಿಯಲ್ಲಿ 73 ಮತ್ತು 74ನೆ ಸಂವಿಧಾನ ತಿದ್ದುಪಡಿಗಳಿಗೆ ಈ ಚಿಂತನೆ ಪ್ರೇರಣೆಯಾಯಿತು. ಒಟ್ಟಿನಲ್ಲಿ ಹೆಗಡೆ ಅವರು ಜಾತಿ ಆಧಾರಿತ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ್ದರು. ಅವರ ನಾಯಕತ್ವವನ್ನು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಒಪ್ಪಿಕೊಂಡಿದ್ದರು. ಅಧಿಕಾರದಲ್ಲಿದ್ದಾಗಲೂ ಜನಸೇವೆ ಮತ್ತು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಕೆಲಸ ಮಾಡಿದ್ದರು ಎಂದು ಅವರು ಹೇಳಿದರು.

ರಾಮಕೃಷ್ಣ ಹೆಗಡೆ ಅವರ ಬದುಕು ಒಂದು ನಿಘಂಟು ಇದ್ದಂತೆ. ಅವರ ಆಚಾರ-ವಿಚಾರಗಳನ್ನು ನೋಡಿಕೊಂಡು ನಾವು ಅನೇಕ ವಿಚಾರಗಳನ್ನು ಕಲಿಯಬಹುದು. ಅಧಿಕಾರವನ್ನು ಶಕ್ತಿಯ ಸಂಕೇತವಾಗಿ ಅಲ್ಲ, ಜನಸೇವೆಗೆ ದೊರೆತ ಅವಕಾಶವಾಗಿ ನೋಡಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದ ಅವರು, ಕರ್ನಾಟಕದಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ವಿಸ್ತರಣೆಗೆ ಹೆಗಡೆ ಅವರ ನೀತಿಗಳು ಸಹಕಾರಿಯಾದವು. ಇಂದು ಕರ್ನಾಟಕದಲ್ಲಿ ವರ್ಷಕ್ಕೆ ಸುಮಾರು 13,940 ವೈದ್ಯರು ಹಾಗೂ 1.25 ಲಕ್ಷಕ್ಕೂ ಹೆಚ್ಚು ಇಂಜಿನಿಯರ್‍ಗಳು ರೂಪುಗೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ರಾಮಕೃಷ್ಣ ಹೆಗಡೆ ಅವರ ರಾಜಕೀಯ ಪ್ರಭಾವವನ್ನು ನೆನಪಿಸಿಕೊಂಡರು. ಅವರಿಂದ ರೂಪುಗೊಂಡ ನಾಯಕರು ಇಂದು ವಿವಿಧ ರಾಜಕೀಯ ಪಕ್ಷಗಳಲ್ಲಿ ಕಾಣಸಿಗುತ್ತಾರೆ. ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ, ಬಿ.ಎಲ್.ಶಂಕರ್ ಸೇರಿದಂತೆ ಅನೇಕ ನಾಯಕರು ಹೆಗಡೆ ಅವರ ರಾಜಕೀಯ ಶಾಲೆಯೊಂದಿಗೆ ಬೆಳೆದವರು.ಹೆಗಡೆ ಅವರು ಹಿಂಬಾಲಕರನ್ನು ಮಾತ್ರ ಸೃಷ್ಟಿಸಲಿಲ್ಲ. ನಾಯಕರನ್ನು ಸೃಷ್ಟಿಸಿದರು. ಇಲ್ಲಿ ಕುಳಿತಿರುವ ನೂರಾರು ನಾಯಕರು ಅದಕ್ಕೆ ಸಾಕ್ಷಿ ಎಂದು ಅವರು ನುಡಿದರು.

ನಮ್ಮ ಸರಕಾರ ರಾಮಕೃಷ್ಣ ಹೆಗಡೆ ಅವರ ಆಚಾರ–ವಿಚಾರ, ಮೌಲ್ಯಾಧಾರಿತ ರಾಜಕಾರಣ, ಪಂಚಾಯತ್ ರಾಜ್ ಮತ್ತು ಅಭಿವೃದ್ಧಿ ಚಿಂತನೆಗಳನ್ನು ಮುಂದುವರಿಸಿಕೊಂಡು ಹೋಗಲಿದೆ ಎಂದೂ ಡಿ.ಕೆ.ಶಿವಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor