×
Ad

ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿದ ಡಿಸಿಎಂ ಡಿಕೆ ಶಿವಕುಮಾರ್; ಚರ್ಚೆಗೆ ಗ್ರಾಸ

ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-ಆರೆಸ್ಸೆಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ:‌ ವಿವಾದದ ಬಳಿಕ ಡಿಕೆಶಿ ಪ್ರತಿಕ್ರಿಯೆ

Update: 2025-08-22 12:27 IST

ಬೆಂಗಳೂರು : ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೆಸ್ಸೆಸ್ ಗೀತೆಯನ್ನು ಹಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಕುರಿತ ಚರ್ಚೆಯ ವೇಳೆ ತಮ್ಮ ರಾಜಕೀಯ ಪ್ರಯಾಣದ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೆಸ್ಸೆಸ್ ಜೊತೆಗಿನ ಆರಂಭಿಕ ಸಂಬಂಧವನ್ನು ನೆನಪಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಡಿಕೆ ಶಿವಕುಮಾರ್ ಅವರು ಆರೆಸ್ಸೆಸ್ ಗೀತೆ "ನಮಸ್ತೆ ಸದಾ ವತ್ಸಲೇ" ಹಾಡಿದರು. ಇದು ಸದನದಲ್ಲಿ ನಗು ಮತ್ತು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ಈ ಕುರಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. “ಇದು ಸಿದ್ದರಾಮಯ್ಯ ಅವರಿಗೆ ನೇರ ಎಚ್ಚರಿಕೆಯೇ? ನೀವು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡದಿದ್ದರೆ ನಾನು ಬಿಜೆಪಿಗೆ ಸೇರಲು ಸಿದ್ಧನಿದ್ದೇನೆ ಎಂಬ ಸಂದೇಶವೇ?” ಎಂದು ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರೋರ್ವರು ಪ್ರಶ್ನಿಸಿದ್ದಾರೆ.

"ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಆರೆಸ್ಸೆಸ್‌ಗೆ ಶ್ಲಾಘಿಸಿದ್ದಕ್ಕೆ ಕಾಂಗ್ರೆಸ್ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸುತ್ತಿದೆ. ಆದರೆ, ಡಿಕೆ ಶಿವಕುಮಾರ್ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಿದ್ದಾರೆ. ಕಾಂಗ್ರೆಸ್ ಅವರನ್ನು ಶೀಘ್ರದಲ್ಲೇ ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೆ, ಅವರು 'ಕಾಶಿ ಮಥುರಾ ಬಾಕಿ ಹೈ' ಘೋಷಣೆಗಳನ್ನು ಕೂಗುವುದನ್ನು ನೋಡಬಹುದು ಎಂದು ಮತ್ತೋರ್ವರು ಪ್ರತಿಕ್ರಿಯಿಸಿದ್ದಾರೆ.

ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ :

ಈ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಪರೋಕ್ಷವಾಗಿ ಅಥವಾ ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

"ನಾನು ಎಲ್ಲಾ ರಾಜಕೀಯ ಪಕ್ಷಗಳ ಬಗ್ಗೆ ಸಂಶೋಧನೆ ಮಾಡಿದ್ದೇನೆ. ಕರ್ನಾಟಕದಲ್ಲಿ ಆರೆಸ್ಸೆಸ್ ಸಂಸ್ಥೆಗಳನ್ನು ಹೇಗೆ ನಿರ್ಮಿಸುತ್ತಿದೆ ಎಂದು ನನಗೆ ತಿಳಿದಿದೆ. ಜಿಲ್ಲೆ ಮತ್ತು ತಾಲೂಕಿನಲ್ಲಿ ಪ್ರತಿಯೊಂದು ಶಾಲೆಯನ್ನೂ ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ನಾನು ಕಾಂಗ್ರೆಸ್ಸಿಗ ಮತ್ತು ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ" ಎಂದು ಹೇಳಿದರು.

ಆರೆಸ್ಸೆಸ್ ಒಂದು ಸಂಘಟನೆ, ನಾವು ಅದರ ಬಗ್ಗೆ ಪ್ರಶ್ನಿಸುವುದಿಲ್ಲ. ಆದರೆ, ಆರೆಸ್ಸೆಸ್‌ಗೆ ಯಾವುದೇ ಇತಿಹಾಸವಿಲ್ಲ. ಆರೆಸ್ಸೆಸ್ ಹೊಸದಾಗಿ ಹುಟ್ಟಿದ ಸಂಘಟನೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿ ದೀರ್ಘ ಇತಿಹಾಸವಿದೆ. ಆರೆಸ್ಸೆಸ್ ದೀರ್ಘಕಾಲ ರಾಷ್ಟ್ರಧ್ವಜವನ್ನು ಹಾರಿಸಿಲ್ಲ. ವಾಜಪೇಯಿ ಮುಂದಾಳತ್ವ ತಾಳಿದ ಬಳಿಕ ಅದು ಸಾಧ್ಯವಾಯಿತು ಎಂದು ಡಿಕೆ ಶಿವಕುಮಾರ್ ಇದೇ ವೇಳೆ ನೆನಪಿಸಿದರು.

ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-ಆರೆಸ್ಸೆಸ್  ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ:

"ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರೆಸ್ಸೆಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, "ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರೆಸ್ಸೆಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ" ಎಂದರು.

"ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರೆಸ್ಸೆಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರೆಸ್ಸೆಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ" ಎಂದರು.

"ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರೆಸ್ಸೆಸ್ ಇತಿಹಾಸ ತಿಳಿದುಕೊಂಡಿದ್ದೇನೆ" ಎಂದರು.

"ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು ಅದೇ ರೀತಿ ನಾವು ಮಾಡಿದ್ದೇವೆ" ಎಂದು ಹೇಳಿದರು.

ನಿಮ್ಮಲ್ಲೂ (ಮಾಧ್ಯಮ) ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ? ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News