×
Ad

ದೇಶದಲ್ಲಿ ಆಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ : ಡಾ.ಮಹದೇವಪ್ಪ

Update: 2025-06-28 20:35 IST

ಬೆಂಗಳೂರು : ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಅಧಿಕಾರಕ್ಕೆ ಬಂದ ದಿನದಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಇದ್ದು, ಇದು ದೇಶದ ಅಂತರ್ ಶಕ್ತಿಯನ್ನು ಕುಂದಿಸುವಂತಹ ಕೆಲಸ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂವಿಧಾನಾತ್ಮಕವಾದ ಸ್ವತಂತ್ರ ಸಂಸ್ಥೆಗಳನ್ನು ನಿಯಂತ್ರಣಕ್ಕೆ ಪಡೆದು, ವಿರೋಧ ಪಕ್ಷಗಳ ಮೇಲೆ ರಾಜಕೀಯ ಪ್ರೇರಿತ ದಾಳಿ ಮಾಡಲು ಬಳಸಿಕೊಳ್ಳುತ್ತಿರುವ ಕೇಂದ್ರ ಸರಕಾರವು, ದೇಶದ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.

ಉತ್ತಮ ಆಡಳಿತಕ್ಕಾಗಿ ಯಾರಾದರೂ ಸಲಹೆ ನೀಡಿದರೆ ಅಥವಾ ವಿಮರ್ಶೆ ಮಾಡಿದರೆ ಅವರನ್ನು ವ್ಯವಸ್ಥಿತವಾಗಿ ಹಣಿಯುವಂತಹ ಹುನ್ನಾರವನ್ನು ಕೇಂದ್ರ ಸರಕಾರ ನಡೆಸುತ್ತಾ ಬಂದಿದೆ. ರಾಜಕೀಯ ಎದುರಾಳಿಗಳನ್ನು ಐಟಿ, ಈ.ಡಿ, ಸಿಬಿಐ ನಂತಹ ತನಿಖಾ ಸಂಸ್ಥೆಗಳ ಮೂಲಕ ನಿರಂತರವಾಗಿ ನಿಯಂತ್ರಿಸುತ್ತಿರುವ ಕೇಂದ್ರ ಸರಕಾರವು ದೇಶದಲ್ಲಿ ಅಘೋಷಿತ ರಾಜಕೀಯ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದೆ ಎಂದು ಅವರು ದೂರಿದ್ದಾರೆ.

ಇನ್ನೊಂದೆಡೆ ಸಾಮಾಜಿಕ ಅಸಮಾನತೆಯನ್ನು ಉತ್ತೇಜಿಸುವಂತಹ ಆರೆಸ್ಸೆಸ್‍ನ ನಡವಳಿಕೆಗಳನ್ನು ನಿಯಂತ್ರಿಸದೇ ಸಾಮಾಜಿಕ ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿದೆ. ಇನ್ನು ರಾಜ್ಯ ಸರಕಾರಕ್ಕೆ ಬರಬೇಕಾದ ನ್ಯಾಯಬದ್ಧವಾದ ತೆರಿಗೆ ಪಾಲನ್ನು ನೀಡದೇ ಸತಾಯಿಸುತ್ತಿರುವ ಕೇಂದ್ರ ಸರಕಾರವು ನಾಡಿನ ಜನ ಮತ್ತು ಅವರ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಾಣಿಸಿದೆ. ದೇಶದ ಸಂಪತ್ತನ್ನು ತಮ್ಮ ಕಾರ್ಪೊ ರೇಟ್ ಸ್ನೇಹಿತರ ನಿಯಂತ್ರಣಕ್ಕೆ ಒಪ್ಪಿಸಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಜನರ ಮೇಲೆ ಹೇರಿದೆ ಎಂದು ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಸಂವಿಧಾನಾತ್ಮಕವಾಗಿ ಇರುವಂತಹ ಭಾವೈಕ್ಯತೆ, ಜಾತ್ಯತೀತತೆ ಮತ್ತು ಸಮಾನತೆಯ ತತ್ವಗಳನ್ನು ಗಾಳಿಗೆ ತೂರಿ, ಸ್ವಾತಂತ್ರ್ಯದ ಮಹಾನ್ ಉದ್ದೇಶಗಳನ್ನು ಗಣನೆಗೇ ತೆಗೆದುಕೊಳ್ಳದೇ ಏಕ ಮುಖವಾಗಿ ವರ್ತಿಸುತ್ತಿರುವ ಕೇಂದ್ರ ಸರಕಾರವು, ತನ್ನ ಅರಾಜಕ ಪ್ರವೃತ್ತಿಯ ಮೂಲಕ ದೇಶದಲ್ಲಿ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ತುರ್ತು ಪರಿಸ್ಥಿತಿಯನ್ನು ಹೇರಿದ್ದು ಇದು ದೇಶದ ಆತ್ಮವಾದ ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News