ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಈಡಿ ನೋಟೀಸ್: ಡಿ.ಕೆ. ಶಿವಕುಮಾರ್
ಬೆಂಗಳೂರು : "ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಈಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, "ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ" ಎಂದು ತಿಳಿಸಿದರು.
ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, "ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ಒಟ್ಟಿಗೆ ತನಿಖೆ ಮಾಡುವಂತಿಲ್ಲ ಎಂದು ತಿಳಿಸಿದರು.
ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, "ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು.