×
Ad

ರಾಜ್ಯದಲ್ಲಿ 2026ಕ್ಕೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ : ಚುನಾವಣಾ ಆಯೋಗ

Update: 2025-09-17 20:18 IST

ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು, ಸೆ.17 : ಮತದಾರರ ಪಟ್ಟಿಗಳ ವಿಶ್ವಾರ್ಹತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ 2026ಕ್ಕೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ನಡೆಯಲಿದೆ. ಇದರ ಪೂರ್ವ ಸಿದ್ದತೆಯನ್ನು ಮುಖ್ಯ ಚುನಾವಣಾ ಆಯೋಗ ಆರಂಭಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.

ಬುಧವಾರ ನಗರದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್) ಕುರಿತ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2002ರಲ್ಲಿ ಎಸ್‍ಐಆರ್ ನಡೆಸಲಾಗಿತ್ತು. ಇದೀಗ 23 ವರ್ಷಗಳ ನಂತರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ನಿರ್ಧರಿಸಲಾಗಿದೆ ಎಂದರು.

ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಪ್ರತಿ ಮತದಾರರ ಮನೆಗೂ ಹೋಗಿ ಮತದಾರರ ಗುರುತಿನ ಚೀಟಿ ಪರಿಶೀಲಿಸಲಿದ್ದಾರೆ. 2002ರ ಮತದಾರರ ವಿಶೇಷ ಪರಿಷ್ಕರಣೆ ಪಟ್ಟಿ ಹಾಗೂ 2025ರ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳನ್ನು ಪರಿಶೀಲಿಸಲಾಗುವುದು. ಬಿಎಲ್‍ಒಗಳು ಮನೆ ಭೇಟಿಯ ವೇಳೆ ಪ್ರತಿ ಮನೆಗೂ ಎರಡು ನಮೂನೆಗಳನ್ನು ನೀಡಿ ಮಾಹಿತಿ ಪಡೆಯಲಿದ್ದಾರೆ. ಅದರಲ್ಲಿ ಒಂದು ನಮೂನೆಯನ್ನು ಅಧಿಕಾರಿಗಳು ಸಹಿ ಮಾಡಿ ಮತದಾರರಿಗೆ ಹಿಂತಿರುಗಿಸಲಿದ್ದಾರೆ ಎಂದು ಅವರು ತಿಳಿಸಿದರು.

ಮನೆಯಲ್ಲಿ ಯಾರೂ ಲಭ್ಯವಿರದಿದ್ದರೆ ಬಿಎಲ್‍ಒಗಳು ಮೂರು ಬಾರಿ ಭೇಟಿ ನೀಡಲಿದ್ದು, ಪಕ್ಕದ ಮನೆಯವರ ಸಹಾಯದಿಂದ ಸಂಪರ್ಕ ಸಾಧಿಸಲಿದ್ದಾರೆ. ಮತದಾರರ ಗುರುತಿನ ಚೀಟಿಯಲ್ಲಿ ಭಾವಚಿತ್ರ ಸ್ಪಷ್ಟವಾಗಿ ಇರದಿದ್ದರೆ ಮತದಾರರು ಹೊಸ ಫೋಟೋ ನೀಡಬೇಕು. ಪ್ರತಿಯೊಬ್ಬ ಮತದಾರರು ಆಯೋಗ ಕೇಳಿರುವ ಒಂದು ದಾಖಲೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ವಿ.ಅನ್ಬುಕುಮಾರ್ ಹೇಳಿದರು.

ಪ್ರಸ್ತುತ ಎಸ್‍ಐಆರ್‌ನಲ್ಲಿ ದಾಖಲೆ ನೀಡಿದರೆ, ಮುಂದಿನ ಪರಿಷ್ಕರಣೆಯಲ್ಲಿ ಮತ್ತೆ ದಾಖಲೆ ಕೇಳುವುದಿಲ್ಲ. ಮನೆಯಲ್ಲಿ ಲಭ್ಯವಿಲ್ಲದವರು ಆನ್‍ಲೈನ್‍ನಲ್ಲೂ ಅರ್ಜಿ ಹಾಕಬಹುದು. ಎರಡು ಕಡೆ ಹೆಸರು ಇದ್ದರೆ ಫೊಟೋ ಸ್ಕ್ಯಾನಿಂಗ್ ಸಿಸ್ಟಮ್ ಮೂಲಕ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು. ಒಂದೇ ವ್ಯಕ್ತಿ ಎರಡು ಕಡೆ ಅರ್ಜಿ ಹಾಕಿದರೆ, ಪ್ರಕರಣ ದಾಖಲಿಸಲಾಗುವುದು ಎಂದು ವಿ.ಅನ್ಬುಕುಮಾರ್ ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಂತರವೂ ಮತದಾರರ ಹೆಸರಿಲ್ಲದಿದ್ದರೆ ಬಿಎಲ್‍ಒಗಳು ನೀಡಿರುವ ಸಹಿ ಮಾಡಿದ ನಮೂನೆ ಮೂಲಕ ಪ್ರಶ್ನಿಸಬಹುದು. ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ಇತ್ತೀಚೆಗೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ ಎಂದು ವಿ.ಅನ್ಬುಕುಮಾರ್ ತಿಳಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ವಿವರ ನೀಡಲಾಗಿದೆ. ಪ್ರತಿ ಬೂತ್‍ಗೆ ಏಜೆಂಟ್‍ಗಳನ್ನು ನೇಮಕ ಮಾಡುವಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಸೂಚಿಸಲಾಗಿದೆ. ರಾಜ್ಯದಲ್ಲಿ ಒಟ್ಟು 55 ಸಾವಿರ ಮತಗಟ್ಟೆಗಳಿವೆ. ಎಸ್‍ಐಆರ್‍ಗೆ 18 ಸಾವಿರ ಬೂತ್ ಮಟ್ಟದ ಅಧಿಕಾರಿಗಳು ಇರಲಿದ್ದಾರೆ ಎಂದು ವಿ.ಅನ್ಬುಕುಮಾರ್ ಹೇಳಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ಬಳಸಿಕೊಳ್ಳಲಾಗುವುದು. ಆದರೆ, ಯಾವಾಗ ಈ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಈಗಲೇ ಸ್ಪಷ್ಟವಾಗಿ ಹೇಳಲಾಗುವುದಿಲ್ಲ, ಸದ್ಯ ತಯಾರಿಯಷ್ಟೇ ನಡೆಸಿದ್ದೇವೆ. ಸೆ.23ರೊಳಗೆ ಎಸ್‍ಐಆರ್ ಪ್ರಕ್ರಿಯೆಗೆ ತಯಾರಿ ಪೂರ್ಣಗೊಳ್ಳಲಿದೆ. ಕೇಂದ್ರ ಸರಕಾರದ ಅಧಿಕೃತ ಅಧಿಸೂಚನೆ ನಂತರ ಎಸ್‍ಐಆರ್ ಕಾರ್ಯ ಆರಂಭಿಸಲಾಗುವುದು ಎಂದು ವಿ.ಅನ್ಬುಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News