ಕಾಂಗ್ರೆಸ್ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ: ಡಿ.ಕೆ. ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ನಮ್ಮ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಗುರುವಾರ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಡವರ ಬದುಕಿಗಾಗಿ ನಾವು ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರಕಾರ ಬಡವರಿಗಾಗಿ ಜಮೀನು, ನಿವೇಶನ, ಪಿಂಚಣಿ, ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮ ಕೊಟ್ಟಿದೆ. ಅದೇ ರೀತಿ ನಾವು ಗ್ಯಾರಂಟಿ ಯೋಜನೆ ನೀಡಿದೆವು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಮಂತ್ರಿ ಸೇರಿದಂತೆ ಬಿಜೆಪಿಯ ಎಲ್ಲ ನಾಯಕರು ಟೀಕೆ ಮಾಡಿದರು ಎಂದರು.
ಕರ್ನಾಟಕದಲ್ಲಿ ಯೋಜನೆ ಜಾರಿಯಾದ ನಂತರ ಬಿಜೆಪಿಯವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದಿಲ್ಲಿ, ಹರ್ಯಾಣ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರು. ಈಗ ಬಿಹಾರದಲ್ಲಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರಕಾರ ಸದಾ ದೇಶಕ್ಕೆ ಮಾದರಿ. ಕಾಂಗ್ರೆಸ್ ಮಾದರಿಯನ್ನು ಇಡೀ ದೇಶವೇ ಪಾಲಿಸುತ್ತಿದೆ ಎಂದು ಶಿವಕುಮಾರ್ ತಿಳಿಸಿದರು.