‘ಆಪರೇಷನ್ ಸಿಂಧೂರ’ ಬಗ್ಗೆ ಅವಹೇಳನ ಆರೋಪ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲು
ಶಾಸಕ ಕೊತ್ತೂರು ಮಂಜುನಾಥ್
ಬೆಂಗಳೂರು: ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ನಡೆಸಿದ ಭಾರತೀಯ ಸೇನೆಯ ಯುದ್ಧದ ಕಾರ್ಯಾಚರಣೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಇಲ್ಲಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ರಾವ್ ಎಂಬುವರು ನೀಡಿದ ದೂರಿನನ್ವಯ ಬನಶಂಕರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸಿ ಕಾನೂನು ಕ್ರಮ ಜರುಗಿರುವುದಾಗಿ ತಿಳಿಸಿದ್ದಾರೆ.
ದೂರಿನಲ್ಲೇನಿದೆ?:
‘ಎ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ನಾಗರಿಕರನ್ನು ಅವರ ಕುಟುಂಬದವರ ಸಮ್ಮುಖದಲ್ಲೇ ಭಯೋತ್ಪಾದಕರು ಹತ್ಯೆ ಮಾಡಿದರು. ಇದಕ್ಕೆ ಪ್ರತೀಕಾರವಾಗಿ ಭಾರತ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ನಡೆಸಿದ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಮತ್ತು 8 ವಾಯುನೆಲೆಗಳನ್ನು ನಾಶ ಮಾಡಿದ್ದರು.
ಪಾಕಿಸ್ತಾನಕ್ಕೆ ಸೇರಿದ 16 ಯುದ್ಧ ವಿಮಾನ, ಚೀನಾದ ಕ್ಷಿಪಣಿಗಳು, ಡ್ರೋನ್ಗಳನ್ನು ನಾಶ ಮಾಡಿದ ಭಾರತೀಯ ಸೇನೆಯ ಪರಾಕ್ರಮಕ್ಕೆ ಇಡೀ ವಿಶ್ವದಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೆ, ಈ ಸಮಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಮೇ 16ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ‘ಭಾರತೀಯ ಸೇನೆ 4 ವಿಮಾನಗಳನ್ನು ಅತ್ತಿಂದ ಇತ್ತ, ಇತ್ತಿಂದ ಅತ್ತ ಹಾರಾಡಿಸಿ ಬಡಾಯಿಕೊಚ್ಚಿಕೊಳ್ಳುತ್ತಿದೆ. ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿರುವ ದಾಳಿಗೆ ಸಾಕ್ಷ್ಯಗಳೇನು?’ ಎಂಬ ಹೇಳಿಕೆ ನೀಡುವ ಮೂಲಕ ಭಾರತ ದೇಶ ಮತ್ತು ಭಾರತೀಯ ಸೇನೆಗೆ ಕಳಂಕ ಹಚ್ಚುವ ಮಾತುಗಳನ್ನಾಡಿದ್ದರು.
ತಮ್ಮ ಮಾತುಗಳ ಮೂಲಕ 140 ಕೋಟಿ ಭಾರತೀಯರ ಭಾವನೆಗಳಿಗೆ ಧಕ್ಕೆ ತಂದಿರುವ ಹಾಗೂ ಬಹಿರಂಗವಾಗಿ ಭಾರತೀಯ ಸೇನೆಗೆ ಅವಮಾನಕರ ಮಾತುಗಳನ್ನಾಡಿರುವ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಕೂಡಲೇ ದೇಶದ್ರೋಹದ ಪ್ರಕರಣ ಮತ್ತು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.