ಬೆಂಗಳೂರು : ಬೇರೆ ಊರುಗಳಿಗೆ ಸ್ಥಳಾಂತರಗೊಂಡು ನೆಲೆಸಿರುವ ಜನರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗೊಳಿಯಬಾರದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸೂಚನೆ ನೀಡಿದರು.

ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಶಾಶ್ವತ ನಿವಾಸಿಗಳ ಸರ್ಟಿಫಿಕೇಟ್ (ಪಿಆರ್‌ಸಿ) ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು. ಅರ್ಜಿ ನಮೂನೆ 6 ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಕಾರಣಾಂತರಗಳಿಂದ ಊರು ತೊರೆದು ಹಲವು ವರ್ಷಗಳಿಂದ ಬೇರೆ ಕಡೆ ನೆಲೆಸಿರುವ ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯೂ ಇರುತ್ತದೆ. ಈ ಬಗ್ಗೆ ನಿರ್ಲಕ್ಷ್ಯವಹಿಸುವುದು ಬೇಡ. ಸ್ಥಳಾಂತರಗೊಂಡಿರುವವರ ಅಗತ್ಯ ಮಾಹಿತಿಯನ್ನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.

ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯ ತ್ವರಿತಗೊಳಿಸಿ : ಭಾರತ್ ಜೋಡೋ ಯುವ ಸಂಘ ಮುಖ್ಯಮಂತ್ರಿಯವರ ಕನಸಿನ ಯೋಜನೆಯಾಗಿದೆ. ಸಂಘಗಳ ನೋಂದಣಿ, ಮೆಂಟರ್ಸ್‌ಗಳ ನೇಮಕ ಸೇರಿದಂತೆ ಸಂಘ ಪ್ರಾರಂಭಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಬೇಕು. ಭಾರತ್ ಜೋಡೋ ಯುವಕ ಸಂಘ ಇಡೀ ದೇಶದಲ್ಲಿ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಕಾರ್ಯಕ್ರಮ. ಇದರಿಂದ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದರು.

ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ : ಪ್ರಜಾಸೇವಾ ಅಭಿಯಾನದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ‌. ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸಮಸ್ಯೆ ಸೇರಿದಂತೆ ಮುಂತಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಆರ್‌ಟಿಸಿ, ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದೆ. ಆದಾಗ್ಯೂ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬಡವರಿಗೆ ನಿವೇಶನ ನಿರ್ಲಕ್ಷ್ಯ ಬೇಡ:

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ನಿರ್ಲಕ್ಷಿಸುವುದು ಬೇಡ. ಹಿರಿಯ ಅಧಿಕಾರಿಗಳು ಟೆಕ್ನಿಕಲ್‌ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂ ಮಾಪನ ಮತ್ತು ಭೂ ದಾಖಲೆ‌ ಇಲಾಖೆಯ ಆಯುಕ್ತ ವೆಂಕಟರಾಜ್ ಮುಂತಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor