ʼಗೃಹಲಕ್ಷ್ಮೀʼ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
"ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ನೀಡಲಾಗುತ್ತಿದೆ"
ಬೆಂಗಳೂರು : ಸರಕು ಮತ್ತ ಸೇವಾ ತೆರಿಗೆ(ಜಿಎಸ್ಟಿ) ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು 52 ಸಾವಿರ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಆ ಪೈಕಿ ಮೊದಲ ಹಂತದಲ್ಲಿ 20ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಸೋಮವಾರ ಪರಿಷತ್ ಕಲಾಪದಲ್ಲಿ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ನೀಡಲಾಗುತ್ತಿದೆ. ಐಟಿ ಹಾಗೂ ಜಿಎಸ್ಟಿ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಯೋಜನೆಯಡಿ ಹಣ ತಲುಪುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಈಗಾಗಲೇ 20 ಸಾವಿರ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗಿದೆ ಎಂದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿ ಮಾತನಾಡಿದ ಪೂಜಾರ್, ಐಟಿ ಹಾಗೂ ಜಿಎಸ್ಟಿ ಪಾವತಿ ಮಾಡುತ್ತಿರುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯಲ್ಲಿ 712 ಮಂದಿ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ತೆರಿಗೆ ಪಾವತಿ ಮಾಡದಿರುವ ಬಗ್ಗೆ ಅಗತ್ಯ ದಾಖಲಾತಿಗಳನ್ನು ಒದಗಿಸಿದರೂ ಇದುವರೆಗೂ ಗೃಹ ಲಕ್ಷ್ಮೀ ಹಣ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಜಿಎಸ್ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದೆ. ಈ ಬಗ್ಗೆ ಐಟಿ ಇಲಾಖೆಗೆ ಪತ್ರ ಬರೆಯಲಾಗಿದೆ. ಜಿಎಸ್ಟಿ ಕೌನ್ಸಿಲ್ ಗಮನಕ್ಕೂ ತರಲಾಗಿದೆ. ಈ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.
ಆದಾಯ ತೆರಿಗೆ ಪಾವತಿ ಹಾಗೂ ಜಿಎಸ್ಟಿ ಪಾವತಿಸುವ ಮಹಿಳೆಯರು ಹೊರತುಪಡಿಸಿ ಅರ್ಹ ಫಲಾನುಭವಿಗಳು ಈಗಲೂ ತಮ್ಮ ಹೆಸರನ್ನು ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.