×
Ad

ಸಾಲದ ಖಾತೆಗೆ ‘ಗೃಹಲಕ್ಷ್ಮೀ’ ಹಣ ಹೋಗದಂತೆ ನೋಡಿಕೊಳ್ಳಿ : ಸಿಎಂ ಡಿ.ಕೆ.ಶಿವಕುಮಾರ್

"ಅರ್ಹ ಫಲಾನುಭವಿಗೆ ತೊಂದರೆ ಆಗಬಾರದು, ಯೋಜನೆಯ ದುರುಪಯೋಗಕ್ಕೆ ಕಡಿವಾಣ ಹಾಕಬೇಕು"

Update: 2026-06-19 20:51 IST

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯ ಹಣ ಸಾಲದ ಬ್ಯಾಂಕ್ ಖಾತೆಗೆ ಹೋಗದಂತೆ ಅಧಿಕಾರಿಗಳು ಗಮನಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಈ ಯೋಜನೆ ಹಣ ಹೋದ ತಕ್ಷಣ ಅದನ್ನು ಸಾಲದ ಮೊತ್ತಕ್ಕೆ ಜಮೆ ಮಾಡಲಾಗುತ್ತಿದೆ. ಆದುದರಿಂದ, ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂತಹ ಫಲಾನುಭವಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆಯ ಒಬ್ಬ ಅರ್ಹ ಫಲಾನುಭವಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳು, ಯೋಜನೆಯ ದುರುಪಯೋಗಕ್ಕೆ ಮಾತ್ರ ಕಡಿವಾಣ ಹಾಕಬೇಕು. ಅನುಕೂಲಸ್ಥರು ಯಾರಾದರೂ ಇದ್ದರೆ ಗ್ಯಾರಂಟಿ ಯೋಜನೆಗಳನ್ನು ಸ್ವಯಂ ಪ್ರೇರಿತವಾಗಿ ಬಿಟ್ಟು ಕೊಡುವ ಮೂಲಕ ಇತರೆ ಅರ್ಹ ಫಲಾನುಭವವಿಗಳಿಗೆ ನೆರವಾಗಲು ಮುಂದಾದರೆ ಅವರನ್ನು ಪ್ರೋತ್ಸಾಹಿಸಬೇಕು ಎಂದು ಅವರು ಸೂಚಿಸಿದರು.

2026-27ನೆ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವು ಸೇರಿದಂತೆ 10ಲಕ್ಷ ಉಚಿತ ಬಸ್ ಪಾಸ್‍ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಅಂದಾಜಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಮೇ ಅಂತ್ಯದ ವರೆಗೆ 1.65 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಆದರೆ, ಹೊರರಾಜ್ಯದಿಂದ ಇಲ್ಲಿಗೆ ಬಂದು ನೆಲೆಸಿ ಗೃಹಜ್ಯೋತಿ ಲಾಭ ಪಡೆಯುತ್ತಿರುವವರ ಮಾಹಿತಿ ಸಂಗ್ರಹಿಸಬೇಕು ಎಂದು ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನ್ನಭಾಗ್ಯ ಯೋಜನೆಯಡಿ 2023ರ ಜುಲೈಯಿಂದ 2024ರ ಡಿಸೆಂಬರ್ ವರೆಗೆ ಒಟ್ಟು 72,02,33,970 ಫಲಾನುಭವಿಗಳಿಗೆ ಒಟ್ಟು 11,561.05 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿರುತ್ತದೆ. ತದನಂತರ 2025ನೇ ಫೆಬ್ರವರಿ ತಿಂಗಳಿನಿಂದ ಇಲ್ಲಿಯ ವರೆಗೆ ಪ್ರಸ್ತುತ ರಾಜ್ಯದಲ್ಲಿರುವ ಒಟ್ಟು 4,44,67,942 ಫಲಾನುಭವಿಗಳಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ. ಆದರೆ, ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟವಾಗುತ್ತಿರುವುದನ್ನು ನಿಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ್ ಸೂಚಿಸಿದರು.

ಚರ್ಚೆ: ಕೇಂದ್ರ ಸರಕಾರದ ನೀತಿಗಳಿಂದ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆ, ಬೆಲೆ ಏರಿಕೆಯ ಪರಿಣಾಮಗಳು ಮತ್ತು ತಲಾ ಆದಾಯ ಕುಸಿಯುತ್ತಿರುವುದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗೃಹಲಕ್ಷ್ಮೀ ಯೋಜನೆ ಜಾರಿಯಲ್ಲಿರುವ ಎರಡು ಪ್ರಮುಖ ತಾಂತ್ರಿಕ ಸಮಸ್ಯೆಗಳ ಚರ್ಚೆ ನಡೆಸಲಾಗಿದೆ.

ಮರಣ ಹೊಂದಿದ ಫಲಾನುಭವಿಗಳ ಸಂಖ್ಯೆ ಸಕಾಲದಲ್ಲಿ ದೊರೆಯದಿರುವ ಬಗ್ಗೆ ಇ-ಕೆವೈಸಿ ಹಾಗೂ ಬ್ಯಾಂಕ್ ಖಾತೆ, ಎನ್‍ಪಿಸಿಐ ನಿಷ್ಕ್ರಿಯವಾಗಿರುವ ಫಲಾನುಭವಿಗಳ ಬಗ್ಗೆ, ಅಕೌಂಟೆಟ್ ಜನರಲ್ ವರದಿಯಲ್ಲಿ ಒಂದೇ ಖಾತೆಯಲ್ಲಿ ಹಲವು ಫಲಾನುಭವಿಗಳು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೆ. ಈ ರೀತಿ ಒಟ್ಟು 60 ಕೋಟಿ ರೂ. ಹಣ ಹೋಗಿದೆ. ಒಬ್ಬರೇ ಹಲವು ಖಾತೆಗಳನ್ನು ನೋಂದಾಯಿಸಿರುವುದು ಉಲ್ಲೇಖಿಸಲಾಗಿದೆ ಎಂದರು.

ಸಭೆಯಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಸಿಎಂ ಮುಖ್ಯ ಸಲಹೆಗಾರ ಸುನಿಲ್ ಕನಗೋಳ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಎಸ್.ಆರ್.ಪಾಟೀಲ್, ಪುಷ್ಪಾ ಅಮರನಾಥ್, ಮೆಹ್ರೋಝ್ ಖಾನ್, ಬೆಂಗಳೂರು ಜಿಲ್ಲೆ ಅಧ್ಯಕ್ಷ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News