PSI ನೇಮಕಾತಿ ಅಕ್ರಮ ಖಂಡಿಸಿ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬಿ.ಕೆ. ಹರಿಪ್ರಸಾದ್
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣವನ್ನು ಖಂಡಿಸಿ 2022ರಲ್ಲಿ ಅಂದಿನ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಸಂಬಂಧ ಹಾಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ನಗರದ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಬಿ.ಕೆ. ಹರಿಪ್ರಸಾದ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು.
ಅರ್ಜಿ ಗಮನಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 188 ಹಾಗೂ ಪೊಲೀಸ್ ಕಾಯ್ದೆಯ ಸೆಕ್ಷನ್ 103ರಡಿ ದೂರು ದಾಖಲಾಗಿ, ಅದರ ವಿಚಾರಣೆ ನಡೆಯುತ್ತಿದೆ. ಇಂಥದ್ದೇ ಪ್ರಕರಣ ಸಂಬಂಧ ಹೈಕೋರ್ಟ್ ಹತ್ತಾರು ಪ್ರಕರಣಗಳಲ್ಲಿ ಆದೇಶಗಳನ್ನು ನೀಡಿದೆ. ಈ ಪ್ರಕರಣಕ್ಕೂ ಅದು ಅನ್ವಯವಾಗಲಿದೆ ಎಂದು ತಿಳಿಸಿ, ಅರ್ಜಿಯನ್ನು ಮಾನ್ಯ ಮಾಡಿ ಪ್ರಕರಣ ರದ್ದುಪಡಿಸಿ ಆದೇಶಿಸಿತು. ಬಿ.ಕೆ. ಹರಿಪ್ರಸಾದ್ ಪರ ವಕೀಲ ಸೂರ್ಯ ಮುಕುಂದರಾಜ್ ವಕಾಲತ್ತು ವಹಿಸಿದ್ದರು.