Chikkamagaluru | ಮಲೆನಾಡು ಭಾಗದಲ್ಲಿ ಭಾರೀ ಮಳೆ; ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿಗಳು
ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿದ್ದು, ಅಲ್ಲಲ್ಲಿ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ನದಿಗಳು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿವೆ. ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಪ್ಪ, ಶೃಂಗೇರಿ ತಾಲೂಕು ಮತ್ತು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಯ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿತ್ತು.
ಜಿಲ್ಲೆಯ ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕುಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಮಟ್ಟ ಒಂದೇ ಸಮನೆ ಏರುತ್ತಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಶೃಂಗೇರಿಯ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಶೃಂಗೇರಿ ಶಾರದಾ ಪೀಠಕ್ಕೆ ಸಂಪರ್ಕ ಕಲ್ಪಿಸುವ ಪ್ಯಾರಲಲ್ ರಸ್ತೆ (ಶೃಂಗೇರಿ ಮಠಕ್ಕೆ ಹೋಗುವ ರಸ್ತೆ ) ನೆರೆಯಿಂದ ತುಂಗಾ ನದಿಯ ನೆರೆ ನೀರಿನಿಂದ ಶನಿವಾರ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಪೊಲೀಸರು ಹಾಗೂ ಸ್ಥಳೀಯ ಆಡಳಿತವು ಅಪಾಯದ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ತುಂಗಾ ನದಿಯ ನೀರಿನ ಮಟ್ಟ ಏರಿಕೆಯಿಂದ ಶೃಂಗೇರಿ ಶಾರದಾಂಬ ದೇಗುಲ ಸಮೀಪದ ಕಪ್ಪೆ ಶಂಕರ ಪ್ರದೇಶವೂ ಮುಳುಗಡೆಯಾಗಿದ್ದು, ನದಿತೀರದಲ್ಲಿ ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ. ನದಿಯ ಪ್ರವಾಹ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮದಲ್ಲಿ 269 ಮಿ.ಮೀ. ಮಳೆಯಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿ ದಾಖಲಾಗಿದೆ. ನಿರಂತರ ಮಳೆಯ ಪರಿಣಾಮ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮೀಣ ರಸ್ತೆಗಳಲ್ಲಿ ನೀರು ನಿಂತಿರುವ ವರದಿಯಾಗಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶೃಂಗೇರಿಗೆ ಆಗಮಿಸಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಪಟ್ಟಣದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ದೇವಸ್ಥಾನ ಹಾಗೂ ಪ್ರವಾಸಿ ತಾಣಗಳ ಸುತ್ತಮುತ್ತ ವಾಹನಗಳ ದಟ್ಟಣೆ ಹೆಚ್ಚಿದ್ದು, ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.
ಚಿಕ್ಕಮಗಳೂರು ಸಮೀಪದ ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ತಪ್ಪಲಿನಲ್ಲಿ ನಿರಂತರ ಮಳೆ ಆಗುತ್ತಿದೆ. ಭೂಮಿಯ ತೇವಾಂಶ ಹೆಚ್ಚಾಗಿ ಕವಿಕಲ್ ಗಂಡಿ ಸಮೀಪ ಕಾಂಕ್ರೀಟ್ ವಾಲ್ ನಿರ್ಮಾಣದ ಜಾಗದಲ್ಲೇ ಗುಡ್ಡ ಕುಸಿತ ಆಗಿದೆ. ರಸ್ತೆಗೆ ಬಿದ್ದ ಮಣ್ಣು ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ. ಪ್ರವಾಸಿಗರು ಎಚ್ಚರದಿಂದ ಸಂಚರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಬಾಬಾ ಬುಡನ್ ಗಿರಿ ಶ್ರೇಣಿಯ ಅತ್ತಿಗುಂಡಿ, ಮಹಲ್ ಸೇರಿ ಹತ್ತಾರು ಗ್ರಾಮಗಳ ಮಾರ್ಗದಲ್ಲೇ ಗುಡ್ಡಕುಸಿತ ವಾಗಿದ್ದು ಮಳೆ ಹೆಚ್ಚಾದರೆ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ.
ಭಾರೀ ಗಾಳಿಗೆ ಚಿಕ್ಕಮಗಳೂರು ತಾಲೂಕಿನ ಶಂಕರ್ ಫಾಲ್ಸ್ ಬಳಿ ಮರ ಉರುಳಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಮರ ಬಿದ್ದಿದ್ದು ಮಳೆ ಮಧ್ಯೆಯೇ ಸ್ಥಳಿಯರಿಂದ ತೆರವು ಕಾರ್ಯ ನಡೆಯಿತು. ರಸ್ತೆಯ ಎರಡು ಕಡೆಗಳಲ್ಲೂ ಕಿ.ಮೀ.ಗಟ್ಟಲೇ ವಾಹನಗಳು ನಿಂತಿದ್ದವು. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೂ ಮಳೆ ಚುರುಕು ಪಡೆದು ಕೊಂಡಿದೆ.
ಇನ್ನು ಜಿಲ್ಲೆಯ ಮೂಡಿಗೆರೆ, ಕಳಸ ತಾಲೂಕುಗಳ ವ್ಯಾಪ್ತಿಯಲ್ಲೂ ಶನಿವಾರ ಇಡೀ ದಿನ ಧಾರಾಕಾರ ಮಳೆಯಾಗಿದ್ದು, ಮೂಡಿಗೆರೆ ತಾಲೂಕಿನ ಹೇಮಾವತಿ, ಕಳಸ ತಾಲೂಕಿನಾದ್ಯಂತ ಹರಿಯುವ ಭದ್ರಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿ ನದಿಗಳ ತೀರದಲ್ಲಿರುವ ಹೊಲ ಗದ್ದೆ, ತೋಟಗಳು ಜಲಾವೃತಗೊಂಡಿವೆ. ಜಿಲ್ಲೆಯ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿಯಲ್ಲೂ ಶನಿವಾರ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ.
24 ರಿಂದ 48 ಗಂಟೆಗಳವರೆಗೆ ಭಾರೀ ಮಳೆಯ ಸಾಧ್ಯತೆ: ಹವಾಮಾನ ಇಲಾಖೆ ಮಲೆನಾಡು ಭಾಗಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳವರೆಗೆ ಭಾರೀ ಮಳೆಯ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ. ಅಗತ್ಯವಿಲ್ಲದಿದ್ದರೆ ಪ್ರವಾಸವನ್ನು ಮುಂದೂಡುವಂತೆ ಹಾಗೂ ನದಿತೀರ, ಜಲಪಾತ ಮತ್ತು ತಗ್ಗು ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.