ಎಚ್ಡಿಕೆ ವಿರುದ್ಧದ ಸರಕಾರಿ ಜಮೀನು ಒತ್ತುವರಿ ಆರೋಪ; ಡಿಸಿ ತನಿಖಾ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ರಾಮನಗರದ ಕೇತಗಾನಹಳ್ಳಿಯಲ್ಲಿ ಸರ್ವೇ ಸಂಖ್ಯೆ 8, 9, 10, 16, 17 ಹಾಗೂ 79ರಲ್ಲಿನ ಸರಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕೇತಗಾನಹಳ್ಳಿಯಲ್ಲಿನ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಹಶೀಲ್ದಾರ್ ಜಾರಿ ಮಾಡಿದ್ದ ನೋಟಿಸ್ಗೆ ಏಕಸದಸ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿರುವ ಮೇಲ್ಮನವಿ ಕುರಿತು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಮೇಲ್ಮನವಿ ಕುರಿತು ರಾಜ್ಯ ಸರಕಾರ ಹಾಗೂ ಕುಮಾರಸ್ವಾಮಿ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಕೇತಗಾನಹಳ್ಳಿಯಲ್ಲಿನ ಸರ್ವೇ ನಂಬರ್ 8, 9, 10, 16, 17 ಮತ್ತು 79ಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಡೆಸಿರುವ ತನಿಖಾ ವರದಿಯನ್ನು ಮುಂದಿನ ವಿಚಾರಣೆಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿತು. ಜತೆಗೆ, ತಹಶೀಲ್ದಾರ್ ನೋಟಿಸ್ಗೆ ಆಕ್ಷೇಪಣೆ ಸಲ್ಲಿಸಲು ಕುಮಾರಸ್ವಾಮಿ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ರಾಜ್ಯ ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಕುಮಾರಸ್ವಾಮಿ ಅವರು ಜಮೀನು ಖರೀದಿಸಿಲ್ಲ. ಅದು ಸರ್ಕಾರದ ಭೂಮಿ. ಭೂಕಂದಾಯ ಕಾಯ್ದೆ ಅಡಿ ವಿವಾದಿತ ಭೂಮಿಗೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಕೇತಗಾನಹಳ್ಳಿಯಲ್ಲಿ 22 ಎಕರೆ ಹೊಂದಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. 13 ಎಕರೆಯನ್ನು ಕ್ರಯಪತ್ರದ ಮೂಲಕ ಖರೀದಿಸಿದ್ದಾರೆ. ಉಳಿದ 6.06 ಎಕರೆ ಭೂಮಿಗೆ ದಾಖಲೆಗಳು ಇಲ್ಲ. ಇದಕ್ಕೆ ಕ್ರಯಪತ್ರವಿಲ್ಲ. ಇದನ್ನು ಸಲ್ಲಿಸಿದರೆ ಅದನ್ನು ಪರಿಗಣಿಸಿ, ಸರ್ಕಾರ ತನಿಖೆ ಕೈಬಿಡಲಿದೆ ಎಂದರು.
ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ಮಂಡ್ಯದಲ್ಲಿ ಅರ್ಜಿದಾರರ ರಾಜಕೀಯ ವಿರೋಧಿಯಾದ ಮಾದೇಗೌಡ ಅವರು ಸುಳ್ಳು ಪ್ರಕರಣ ದಾಖಲಿಸಿದ್ದರು. ಇದನ್ನು ಆಧರಿಸಿ ತನಿಖೆ ನಡೆಸಲು, ಲೋಕಾಯುಕ್ತ ಆದೇಶಿಸಿತ್ತು. ತನಿಖೆಯಲ್ಲಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿಲ್ಲ. ಮಂಜೂರು ಮಾಡಿದ್ದ ಭೂಮಿಯನ್ನು ಕುಮಾರಸ್ವಾಮಿ ಖರೀದಿಸಿದ್ದಾರೆ ಎಂದು ವರದಿ ನೀಡಲಾಗಿದೆ. ಈಗ ರಾಜ್ಯ ಸರಕಾರ ಒತ್ತುವರಿ ಭೂಮಿಗೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿದ್ದು, ಇದು ಅಕ್ರಮವಾಗಿದೆ ಎಂದು ಆಕ್ಷೇಪಿಸಿದರು.
ವಿಚಾರಣೆಯ ಒಂದು ಹಂತದಲ್ಲಿ ನ್ಯಾಯಪೀಠ, ಷೋಕಾಸ್ ನೋಟಿಸ್ಗೆ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಸಲ್ಲಿಸಲಿ. ಭೂಮಿ ಯಾರಿಗೆ ಸಂಬಂಧಿಸಿದಂತೆ ಎಂಬುದನ್ನು ತಹಶೀಲ್ದಾರ್ ಪರಿಶೀಲಿಸಬಾರದೇ? ಬೇರೆಯವರಿಗೆ ಮಂಜೂರಾದ ಭೂಮಿಯನ್ನು ಖರೀದಿಸಿದ್ದರೆ ಅದಕ್ಕೆ ದಾಖಲೆ ಇರಬೇಕಲ್ಲವೇ?” ಎಂದು ಹೊಳ್ಳ ಅವರನ್ನು ಕುರಿತು ಪ್ರಶ್ನಿಸಿತು.
ಅಂತಿಮವಾಗಿ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಡೆಸಿರುವ ತನಿಖಾ ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆ ಮುಂದೂಡಿತು.