ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಮಠಾಧೀಶರಾಗಿದ್ದು ಪ್ರವಚನ (ಪಾಂಟಿಫಿಕೇಟ್) ನೀಡಬೇಕೇ ಹೊರತು ರಾಜಕೀಯಗೊಳಿಸಬಾರದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಜತೆಗೆ, ಧಾರವಾಡ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ಕುರಿತ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿದೆ.
2026ರ ಜನವರಿವರೆಗೆ ಧಾರವಾಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಧಾರವಾಡದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ನವೆಂಬರ್ 7ರಂದು ಮುಗಿದಿದೆ. ಬೀದರ್ನಲ್ಲಿ ನಡೆದಿದ್ದ ಬಸವ ಸಮಿತಿ ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಸವತತ್ವ ಬೇರೆ ಬೇರೆ ಎಂದು ಹೇಳಲಾಗಿದ್ದು, ಲಕ್ಷ್ಮೀದೇವಿಯನ್ನು ಜೂಯಿ ಲಕ್ಷ್ಮೀ ಇತ್ಯಾದಿ ಎಂದು ಕರೆದಿದ್ದರು. ಇದಕ್ಕೆ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಖಂಡಿತವಾಗಿಯೂ ಅವಹೇಳನಕಾರಿ ಪದ ಬಳಸುವುದಿಲ್ಲ. ನವೆಂಬರ್ 7ರಂದೇ ಕಾರ್ಯಕ್ರಮ ಮುಗಿದಿದ್ದು, ಅರ್ಜಿದಾರರನ್ನು ಯಾವ ಕಾರಣಕ್ಕಾಗಿ 2026ರ ಜನವರಿ ತಿಂಗಳವರೆಗೆ ನಿರ್ಬಂಧಿಸುತ್ತಿದ್ದಾರೆ ತಿಳಿದಿಲ್ಲ. ನಿರ್ಬಂಧಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ ಎಂದು ಆಕ್ಷೇಪಿಸಿದರು.
ರಾಜ್ಯ ಸರಕಾರದ ಪರ ವಕೀಲರು, ಪೊಲೀಸ್ ವರಿಷ್ಠಾಧಿಕಾರಿಯ ವರದಿ ಪಡೆದು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಕಾಡಸಿದ್ದೇಶ್ವರ ಸ್ವಾಮೀಜಿಗೆ ಭಾಷೆಯ ಮೇಲೆ ಹಿಡಿತವಿಲ್ಲ. ಮುನ್ನೆಚ್ಚರಿಕೆಯ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಸುಪ್ರೀಂಕೋರ್ಟ್ ಸಹ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಜನರ ಭಾವನೆಗಳ ಜತೆ ಆಟವಾಡಲು ಸ್ವಾಮೀಜಿ ಯತ್ನಿಸುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಆಗ ನ್ಯಾಯಪೀಠ ವಕೀಲರನ್ನು ಕುರಿತು, ಎಚ್ಚರಿಕೆಯಿಂದ ಮಾತನಾಡುವಂತೆ ಕಾಡಸಿದ್ದೇಶ್ವರ ಸ್ವಾಮೀಜಿಗೆ ನೀವು ಏಕೆ ಹೇಳುವುದಿಲ್ಲ. ಮಠಾಧೀಶರಾಗಿರುವುದರಿಂದ ಪ್ರವಚನ್ನಷ್ಟೇ ನೀಡಬೇಕು. ಅದನ್ನು ರಾಜಕೀಯಗೊಳಿಸಬಾರದು. ನಿಮ್ಮ ಹೆಸರು ಅದೃಶ್ಯವಾ? ಎಂದಿತು. ಅದಕ್ಕೆ ಪ್ರತಿಕ್ರಿಯಿಸಿದ ವೆಂಕಟೇಶ್ ದಳವಾಯಿ ಅವರು, ಅದೃಶ್ಯ ಕಾಡೇಶ್ವರ ಮಠ. 600 ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಅವಹೇಳನ ಪದ ಬಳಸದಂತೆ ಅವರಿಗೆ ಸೂಚನೆ ನೀಡುತ್ತೇನೆ. ನ್ಯಾಯಾಲಯದ ಭಾವನೆಯನ್ನು ತಲುಪಿಸುತ್ತೇನೆ ಎಂದರು.
ಅಂತಿಮವಾಗಿ ನ್ಯಾಯಪೀಠ, ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿತು.
ಈ ಹಿಂದೆ ವಿಜಯಪುರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಕಲಬುರಗಿ ಪೀಠ ಎತ್ತಿ ಹಿಡಿದಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ ಸಹ ಕಾಯಂಗೊಳಿಸಿದ್ದರಿಂದ ಸ್ವಾಮೀಜಿಗೆ ತೀವ್ರ ಹಿನ್ನಡೆಯಾಗಿತ್ತು.