ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಆಕ್ಷೇಪ; ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ನಡೆಯಬೇಕಿರುವ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಶೇ. 100 ಅರ್ಹ ಮತದಾರರ ಸೇರ್ಪಡೆ ಮಾಡಲು ಮತಪಟ್ಟಿ ನೋಂದಣಿ ಅಧಿಕಾರಿಗೆ ನಿರ್ದೇಶಿಸಲು ಕೋರಿದ ಅರ್ಜಿ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರೊಗೊಳಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್. ಲಕ್ಷ್ಮಣ ಸ್ವಾಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಅಧಿಕಾರಿ ಹಾಗೂ ಮತಪಟ್ಟಿ ನೋಂದಣಿ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.
ಅರ್ಜಿದಾರರ ಮನವಿ:
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ 2026ರಲ್ಲಿ ನಡೆಯಬೇಕಿರುವ ಚುನಾವಣೆಯಲ್ಲಿ ಚುನಾವಣಾ ಆಯೋಗದ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಶೇ. 100 ಅರ್ಹ ಮತದಾರರ ಸೇರ್ಪಡೆ ಮಾಡುವಂತೆ ನಿರ್ದೇಶಿಸಬೇಕು. ಪ್ರಕಟಿತ ಪಟ್ಟಿಯಲ್ಲಿನ ಕಾಲಂ ಸಂಖ್ಯೆ 4ರಲ್ಲಿ ಮತದಾರ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ಪೂರ್ಣ ವಿಳಾಸ ನಮೂದಾಗುವಂತೆ ನೋಡಿಕೊಳ್ಳಬೇಕು. ಈ ಸಂಬಂಧ ಹೆಚ್ಚುವರಿ ಪಟ್ಟಿ ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಆಕ್ಷೇಪವೇನು?
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಮತದಾರರ ಹೆಸರನ್ನು ಸೇರ್ಪಡೆ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ. ವಾಸ್ತವದಲ್ಲಿ ಸದ್ಯದ ಮತದಾರರ ಪಟ್ಟಿ ಅಪೂರ್ಣ ಪಟ್ಟಿಯಾಗಿದೆ. ಪ್ರಸ್ತುತವಿರುವ ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಶಿಕ್ಷಣ ಸಂಸ್ಥೆಗಳ ಪೂರ್ಣ ವಿಳಾಸ ಇಲ್ಲ. ಇದರಿಂದ, ಅರ್ಹ ಮತ್ತು ಬೋಗಸ್ ಮತದಾರರನ್ನು ಗುರುತಿಸುವುದು ಕಷ್ಟವಾಗಿದ್ದು, ನಕಲಿ ಮತದಾರರ ಸೇರ್ಪಡೆ ಹಾಗೂ ಚುನಾವಣಾ ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸಲಿದೆ. ಮತದಾರರ ಪಟ್ಟಿಯಲ್ಲಿ ಯಾರೆಲ್ಲ ಶಿಕ್ಷಕರು ಇದ್ದಾರೆ ಎಂಬ ಬಗ್ಗೆಯೇ ಆಯಾ ಶಿಕ್ಷಣ ಸಂಸ್ಥೆಗಳಿಗೆ ಸರಿಯಾದ ಅರಿವಿಲ್ಲ. ಶಿಕ್ಷಕರು ಕೆಲಸ ಮಾಡುವ ಸ್ಥಳ ಮತ್ತು ಅವರ ನಿವಾಸಗಳ ನಿಖರತೆಯನ್ನು ಚುನಾವಣಾ ಅಧಿಕಾರಿಗಳು ಖುದ್ದು ಪರಿಶೀಲನೆ ನಡೆಸಿ ಖಚಿತಪಡಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.