ಬೆಂಗಳೂರು : ರಾಜ್ಯ ಜಲ ಸಂಪನ್ಮೂಲ ಇಲಾಖೆಯಲ್ಲಿ 300ಕ್ಕೂ ಅಧಿಕ ಕಿರಿಯ ಇಂಜಿನಿಯರ್‌ಗಳ ನೇಮಕಕ್ಕೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕೈಗೊಂಡಿರುವ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಆಯೋಗ ಈಗಾಗಲೇ ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ರಾಜೇಶ್‌ ಡೆಂಗಿ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಶೋಕ್‌ ಎಸ್‌. ಕಿಣಗಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತಲ್ಲದೆ, ಸರ್ಕಾರ ಮತ್ತು ಕೆಪಿಎಸ್‌ಸಿ‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ವಕೀಲರು ಮಧ್ಯಂತರ ಆದೇಶ ಕೋರಿದ್ದಾರೆ. ಅವರು ಕೆಲ ಗಂಭೀರ ಆರೋಪಗಳನ್ನು ಮಾಡಿ, ಆಯ್ಕೆ ಪ್ರಕ್ರಿಯೆಯಲ್ಲಿ ಹಗರಣ ನಡೆದಿದೆ, ಅರ್ಹರ ಪಟ್ಟಿ ಪ್ರಕಟಣೆ ಸಂಬಂಧ ಕೆಲ ಮಾಹಿತಿ ಸೋರಿಕೆಯಾಗಿದೆ. ಕೆಪಿಎಸ್‌ಸಿಯ ಕೆಲ ಅಧಿಕಾರಿಗಳ ಬಂಧನವಾಗಿದೆ ಹಾಗೂ ನಾಲ್ವರು ಮಧ್ಯವರ್ತಿಗಳೂ ಬಂಧನಕ್ಕೆ ಒಳಗಾಗಿದ್ದಾರೆಂದು ತಿಳಿಸಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಮೇಲ್ನೋಟಕ್ಕೆ ಅರ್ಜಿದಾರರ ವಾದದಲ್ಲಿ ಹುರುಳಿದೆ ಎನಿಸುತ್ತಿದೆ. ಆದ್ದರಿಂದ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಆಯೋಗವು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

ಮನವಿ ಏನು?

ಅರ್ಹ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸುವಂತೆ 2026ರ ಆಗಸ್ಟ್ 10ರಂದು ಹೊರಡಿಸಿರುವ ಆದೇಶ ರದ್ದುಗೊಳಿಸಬೇಕು. ಕಿರಿಯ ಇಂಜಿನಿಯರ್‌ಗಳ ನೇಮಕ ಸಂಬಂಧ ಹಳೆಯ ಅಧಿಸೂಚನೆ ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು. ಪ್ರಕರಣದಲ್ಲಿ ಭಾರಿ ಅಕ್ರಮ ನಡೆದಿರುವ ಹಿನ್ನೆಲಯಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌:

ಈ ಮಧ್ಯೆ, ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿರುವ ಅರ್ಜಿಯ ಸಂಬಂಧ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತಿತರರು ಸಲ್ಲಿಸಿರುವ ಅರ್ಜಿಯ ಕುರಿತು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು.

ಸರ್ಕಾರದ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎನ್‌. ಜಗದೀಶ್‌ ಅವರು, ಸಿಬಿಐ ತನಿಖೆ ಅಗತ್ಯವಿಲ್ಲ. ಈ ಹಿಂದೆ ಸಿಐಡಿ ಹಲವು ಪ್ರಕರಣಗಳನ್ನು ಸಮರ್ಥವಾಗಿ ತನಿಖೆ ನಡೆಸಿದೆ ಎಂದು ಹಿಂದಿನ ಪ್ರಕರಣಗಳನ್ನು ಉಲ್ಲೇಖಿಸಿದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್‌ ದಳವಾಯಿ, ವಾಲ್ಮೀಕಿ ಹಗರಣದಲ್ಲಿ ಸಿಬಿಐ ಹಾಗೂ ಇಡಿ ತನಿಖೆಯಲ್ಲಿ ಬಿ.ನಾಗೇಂದ್ರ ಪಾತ್ರ ಬಯಲಾಗಿದ್ದರೂ ಅವರ ವಿರುದ್ಧ ಸಿಐಡಿ ಕ್ರಮ ಕೈಗೊಂಡಿಲ್ಲ. ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ್‌ ಇಡಿಗೆ ಸಿಗಲಿಲ್ಲ. ಸಿಐಡಿ ತನಿಖೆಗೆ ಮಾತ್ರ ಜ್ಞಾನೇಂದ್ರ ಕುಮಾರ್‌ ಹಾಜರಾದರು. ಗೃಹ ಸಚಿವರು ಜ್ಞಾನೇಂದ್ರ ಕುಮಾರ್‌ ರಜೆಯಲ್ಲಿದ್ದಾರೆಂದಿದ್ದರು. ಆದ್ದರಿಂದ, ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ಸತ್ಯಾಂಶ ಹೊರಬೀಳಲಿದೆ ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor