ಪ್ರಚೋದನಕಾರಿ ಹೇಳಿಕೆ : ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ; ಸರಕಾರಕ್ಕೆ ನೋಟಿಸ್

Update: 2026-07-27 19:27 IST

ಬೆಂಗಳೂರು : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡುತ್ತಾ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್‌ಐಆರ್ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.

ಇದೇ ವೇಳೆ, ಅರ್ಜಿಯಲ್ಲಿ ಮೊದಲನೇ ಪ್ರತಿವಾದಿಯಾದ ಸರಕಾರಕ್ಕೆ (ಚಿಕ್ಕಮಗಳೂರು ಟೌನ್ ಪೊಲೀಸರು) ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಪ್ರಕರಣದ ಎಫ್‌ಐಆರ್ ಗಮನಿಸಿದ ನ್ಯಾಯಪೀಠ, ಏಕೆ ಬೇಕು? ಯಾಕೆ ಈ ರೀತಿ ಹೇಳಿದಿರಿ? ಎದೆ ಸೀಳಿದರೆ ಎರಡಕ್ಷರ ಇಲ್ಲ? ಇದೆಲ್ಲ ಏಕೆ ಬೇಕು ಎಂದು ಸಿ.ಟಿ. ರವಿ ಪರ ವಕೀಲರನ್ನು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ಯಾರ ಭಾವನೆಗೂ ಧಕ್ಕೆ ತರುವ ಕೆಲಸವಾಗಿಲ್ಲ. ಮೂರನೇ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಎಸ್‌ಪಿಪಿ ಬಿ.ಎನ್‌. ಜಗದೀಶ್‌ ಅವರು, ಪೊಲೀಸರು ನೋಟಿಸ್ ನೀಡಲು ತೆರಳಿದ್ದಾಗ ಅರ್ಜಿದಾರರು ಸರಿಯಾಗಿ ಸ್ಪಂದಿಸಿಲ್ಲ. ಇದಕ್ಕೆ ಸಂಬಂಧಿಸಿದ‌ ವಿಡಿಯೊ ಸಹ ನಮ್ಮ ಬಳಿ ಇದೆ ಎಂದರು.

ಇದನ್ನು ನಿರಾಕರಿಸಿದ ಅರುಣ್ ಶ್ಯಾಮ್, ಪೊಲೀಸರು ಎಫ್‌ಐಆರ್ ಪ್ರತಿ‌ ಒದಗಿಸದೆಯೇ ನೋಟಿಸ್ ನೀಡಲು ತೆರಳಿದ್ದರು. ಇದರಿಂದ ಅರ್ಜಿದಾರರು ಎಫ್‌ಐಆರ್ ಎಲ್ಲಿ, ಯಾವ ಪ್ರಕರಣ, ಏಕೆ ಇಲ್ಲಿಗೆ ಬಂದಿದ್ದೀರಿ ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ. ತಮ್ಮ ಹಕ್ಕಿನ ಭಾಗವಾಗಿ ಎಫ್ಐಆರ್ ಪ್ರತಿಯನ್ನು ಕೇಳಿದ್ದಾರೆಯೇ ಹೊರತು ಬೇರೇನೂ ಅಲ್ಲ ಎಂದು ಹೇಳಿದರು.

ಅರುಣ್‌ ಶ್ಯಾಮ್‌ ಅವರನ್ನು ಕುರಿತು ನ್ಯಾಯಪೀಠ, ಮೆಲು ಧ್ವನಿಯಲ್ಲಿ ಕೇಳಿದರಾ ಅಥವಾ ಮೇಲು ಧ್ವನಿಯಲ್ಲಿ ಕೇಳಿದರಾ? ಎಂದು ಪ್ರಶ್ನಿಸಿತು. ಅರುಣ್ ಶ್ಯಾಮ್ ಅವರು, ಮೆಲು ಧ್ವನಿಯಲ್ಲೇ ಕೇಳಿದ್ದಾರೆ. ನಾನು ಸಹ ವಿಡಿಯೊ ನೋಡಿದ್ದೇನೆ. ಅದರಲ್ಲಿ ಏನೂ ಇಲ್ಲ ಎಂದರು. ಆಗ ನ್ಯಾಯಪೀಠ, ನೀವು ಹೇಳಿದ ವಿಡಿಯೊ ಎಲ್ಲಿದೆ ಎಂದು ಎಸ್‌ಪಿಪಿ ಅವರನ್ನು ಪ್ರಶ್ನಿಸಿತು. ವಿಡಿಯೊ ಪಡೆದುಕೊಂಡು ನ್ಯಾಯಾಲಯಕ್ಕೆ ಒದಗಿಸುವುದಾಗಿ ಎಸ್‌ಪಿಪಿ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತಲ್ಲದೆ, ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಿತು.

ಪ್ರಕರಣವೇನು?

ಮುದಾಸಿರ್ ಪಾಷಾ ಎಂಬುವರು 2026ರ ಜುಲೈ 24ರ ರಾತ್ರಿ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಜುಲೈ 23ರಂದು ಸಂಜೆ 6 ಗಂಟೆ ಸಮಯದಲ್ಲಿ 'ಯೂತ್ ಫಾರ್ ನೇಷನ್ ಚಿಕ್ಕಮಗಳೂರು' ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ನಂತರ ಆಜಾದ್ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಟಿ. ರವಿ ಅವರು ಭಾಷಣ ಮಾಡುತ್ತಾ, "ಮುಲ್ಲಾನಿಗೂ ನೀಟ್ ಎಕ್ಸಾಮ್‌ಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಆತ ಬಂದು ನೀಟ್ ವಿರುದ್ಧ ಹೋರಾಟ ಅಂತೆ? ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕಂತೆ, ಮೋದಿ ಹಠಾವೋ ಅಂತೆ, ಎದೆ ಸೀಳಿದರೆ ಮೂರು ಅಕ್ಷರ ಇಲ್ಲ ನೀಟ್ ಬಗ್ಗೆ ಮಾತಾಡ್ತೀಯಾ ಎಂದು ಹೇಳಿದ್ದು, ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ ಎಂದು ದೂರಿನಲ್ಲಿ ಆರೋಪಿಸಿದ್ದರು.

ಸಿ.ಟಿ. ರವಿ ಅವರ ಈ ಹೇಳಿಕೆಯ ವಿಡಿಯೊ ಅನ್ನು ಜುಲೈ 24ರಂದು ನನ್ನ ಮೊಬೈಲ್‌ನಲ್ಲಿ ಗಮನಿಸಿದ್ದೇನೆ. ಸಿ.ಟಿ. ರವಿ ಅವರು ತಮ್ಮ ಭಾಷಣದ ವೇಳೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದರು. ಈ ದೂರು ಆಧರಿಸಿ, ಪೊಲೀಸರು ಸಿ.ಟಿ. ರವಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News