×
Ad

ವೀರಪ್ಪನ್ ಕಾರ್ಯಾಚರಣೆಯಲ್ಲಿ ವೈ. ವೈ ಬಗಲಿ ಇದ್ದರೇ ಎಂದು ಮಾಹಿತಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2025-01-23 09:26 IST

ಬೆಂಗಳೂರು: ಕಾಡುಗಳ್ಳ ವೀರಪ್ಪನ್‌ ಕಾರ್ಯಾಚರಣೆಯಲ್ಲಿ ಮೈಸೂರಿನ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ನಿವೃತ್ತ ಸಹಾಯಕ ಆಡಳಿತಾಧಿಕಾರಿ ವೈ ವೈ ಬಗಲಿ ಇದ್ದರೇ? ಎಂದು ಪರಿಶೀಲಿಸಿ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ನೀಡಲು ಹೈಕೋರ್ಟ್‌ ಆದೇಶದ ಹೊರತಾಗಿಯೂ ತಮಗೆ ಪ್ರತಿ ಚದರ ಮೀಟರ್‌ಗೆ 2,100 ರೂಪಾಯಿ ದರದಲ್ಲಿ ನಿವೇಶನ ಮಂಜೂರು ಮಾಡದ ಬಿಡಿಎ ಹಾಗೂ ಸರ್ಕಾರ ಸರ್ಕಾರ ಕ್ರಮ ಪ್ರಶ್ನಿಸಿ ನಿವೃತ್ತ ಕಮಾಂಡಂಟ್‌ ರಾಮದಾಸ್‌ ಗೌಡ ಮತ್ತು ನಿವೃತ್ತ ಸಹಾಯಕ ಆಡಳಿತಾಧಿಕಾರಿ ವೈ ವೈ ಬಗಲಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ನೇತೃತ್ವದ ವಿಭಾಗೀಯ ಪೀಠ ಮೇಲಿನ ಆದೇಶ ನೀಡಿದೆ. ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ಅರ್ಜಿದಾರ ಬಗಲಿ ಅವರು, ವೀರಪ್ಪನ್‌ ಕಾರ್ಯಾಚರಣೆಯಲ್ಲಿ ಭಾಗಿಯಾಗಿಲ್ಲ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಸರ್ಕಾರದ ಹೇಳಿಕೆಗೆ ಬಗಲಿ ಪರ ವಕೀಲರು ವಿರೋಧ ವ್ಯಕ್ತಪಡಿಸಿ, ವೀರಪ್ಪನ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ವಾದ-ಪ್ರತಿವಾದ ಆಲಿಸಿದ ವಿಭಾಗೀಯ ಪೀಠಅರ್ಜಿದಾರರಾದ ವೈ ವೈ‌ ಬಗಲಿ ಅವರು ವೀರಪ್ಪನ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ‌ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೇ ವೀರಪ್ಪನ್‌ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸಿಲ್ಲ ಎಂಬುದು ದೃಢಪಟ್ಟರೆ, ಬಗಲಿ ಅವರು ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ. ಅವರಿಗೆ ಮಂಜೂರು ಮಾಡಿರುವ ನಿವೇಶನ ಹಿಂಪಡೆಯುವಂತೆ ಸರ್ಕಾರಕ್ಕೆ ಸೂಚಿಸಬೇಕಾಗುತ್ತದೆ ಎಂದು ಪೀಠ ಎಚ್ಚರಿಕೆ ಸಹ ನೀಡಿ ಅರ್ಜಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದೆ.

 ಪ್ರಕರಣದ ಹಿನ್ನೆಲೆ: ಕೆಂಪೇಗೌಡ ಬಡಾವಣೆಯಲ್ಲಿ ರಾಮದಾಸ್‌ ಗೌಡ ಅವರಿಗೆ 60X40 ಮತ್ತು ವೈ ವೈ ಬಗಲಿ ಅವರಿಗೆ 30X40 ಚದರ ಅಡಿ ವಿಸ್ತೀರ್ಣದ ನಿವೇಶನ ಮಂಜೂರು ಮಾಡಿ 2017ರಲ್ಲಿ ಬಿಡಿಎ ಪತ್ರ ನೀಡಿತ್ತು. ಆದರೆ, 2018ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅವರು, ಸರ್ಕಾರ 2010ರ ಡಿಸೆಂಬರ್‌ 18ರಂದು ಹೊರಡಿಸಿದ ಆದೇಶದಂತೆ ವೀರಪ್ಪನ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಿಗಳು ಪ್ರತಿ ಚದರ ಮೀಟರ್‌ಗೆ 2,100 ರೂಪಾಯಿ ದರದಲ್ಲಿ ನಿವೇಶನ ಪಡೆಯಲು ಅರ್ಹರಾಗಿದ್ದಾರೆ. ಆದರೆ, ತಮಗೆ ಮಂಜೂರು ಮಾಡಲಾದ ನಿವೇಶನದ ಪ್ರತಿ ಚದರ ಮೀಟರ್‌ಗೆ ಕ್ರಮವಾಗಿ 24,219 ರೂಪಾಯಿ ಮತ್ತು 21,258 ರೂಪಾಯಿ ದರ ನಿಗದಿಪಡಿಸಲಾಗಿದೆ ಎಂದು ಆಕ್ಷೇಪಿಸಿದ್ದರು.

ಅರ್ಜಿಯನ್ನು 2021ರ ನವೆಂಬರ್‌ 17ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠವು 2010ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶದಂತೆ ಅದರಂತೆ ಪ್ರತಿ ಚದರ ಮೀಟರ್‌ಗೆ 2,100 ರೂಪಾಯಿ ದರದಲ್ಲಿ ನಿವೇಶನ ಮಂಜೂರು ಮಾಡಬೇಕು ಎಂಬ ಅರ್ಜಿದಾರರ ಮನವಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಸರ್ಕಾರ ಹಾಗೂ ಬಿಡಿಎಗೆ ನಿರ್ದೇಶಿಸಿತ್ತು.

ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಹೈಕೋರ್ಟ್‌ ಆದೇಶವನ್ನು ಉದ್ದೇಶಪೂರ್ವಕವಾಗಿ ಬಿಡಿಎ ಹಾಗೂ ಸರ್ಕಾರ ಪಾಲಿಸಿಲ್ಲ. ಹೀಗಾಗಿ, ಬಿಡಿಎ ಆಯುಕ್ತರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವಂತೆ ಕೋರಿದ್ದಾರೆ.

ವೀರಪ್ಪನ್ ಹುಟ್ಟೂರಿನಲ್ಲಿ ನೀಡಬೇಕಿತ್ತು ಎಂದು ಅಸಮಾಧಾನ

ಬೆಂಗಳೂರು‌ ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಪಡೆಯಬೇಕಾದರೆ ಯಾವುದೋ ಜನ್ಮದಲ್ಲಿ ಪುಣ್ಯ ಮಾಡಿರಬೇಕಿತ್ತು. ವೀರಪ್ಪನ್‌ ಅನ್ನು ಜೀವಂತವಾಗಿ ಸೆರೆಹಿಡಿಯಲಿಲ್ಲ. ಆದರೆ, ಕೆಂಪೇಗೌಡ ಬಡಾವಣೆಯಲ್ಲಿ ಮಂಜೂರು ಮಾಡಿರುವ ನಿವೇಶನವನ್ನು ಪಡೆದು ಸುಮ್ಮನಿರುವ ಬದಲು ಹೆಚ್ಚಿನ ದರದಲ್ಲಿ ನಿವೇಶನ ಮಂಜೂರು ಮಾಡಲಾಗಿದೆ ಎಂದು ಆಕ್ಷೇಪಿಸಿ ಅರ್ಜಿದಾರರು ನ್ಯಾಯಾಲಯಕ್ಕೆ ಬಂದಿರುವುದು ವಿಪರ್ಯಾಸ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರವು ಸಿಕ್ಕಸಿಕ್ಕ ಕಡೆಯೆಲ್ಲೆಲ್ಲಾ ನಿವೇಶನ ನೀಡಿದರೆ ಇಂತಹ ಬೆಳವಣಿಗೆಗಳೇ ನಡೆಯುತ್ತವೆ. ವೀರಪ್ಪನ್‌ ಹುಟ್ಟೂರು ಗೋಪಿನಾಥಂನಲ್ಲಿ ನಿವೇಶನ ಮಂಜೂರು ಮಾಡಿದ್ದರೆ ಚೆನ್ನಾಗಿರುತ್ತಿತ್ತು. ಆಗ ಮಂಜೂರುದಾರರು ಗೋಪಿನಾಥಂ ಗೆ ತೆರಳಿ ನೆಲೆಸುತ್ತಿದ್ದರೇ? ಎಂಬುದನ್ನು ನೋಡಬಹುದಿತ್ತು ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News