ದಲಿತ ಸಮಾವೇಶಕ್ಕೆ ಯಾವುದೇ ತೊಂದರೆ ಇಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ರಾಜ್ಯದಲ್ಲಿ ದಲಿತ ಸಮುದಾಯದ ಸಮಾವೇಶ ಮಾಡಲು ಯಾವುದೇ ತೊಂದರೆ ಇಲ್ಲ. ದಲಿತ ಸಮುದಾಯ ಯಾವತ್ತೂ ಕಾಂಗ್ರೆಸ್ ಪಕ್ಷದ ಜೊತೆಗೆ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಹೈಕಮಾಂಡ್ ಬೇರೆ ಕಾರಣಕ್ಕಾಗಿ ಸಮಾವೇಶ ಸ್ಥಗಿತ ಮಾಡುವಂತೆ ಹೇಳಿದ್ದರು. ಅದಕ್ಕೆ ಒಪ್ಪಿಕೊಂಡಿದ್ದೆವು. ಆದರೆ, ಪಕ್ಷದ ಹಿತದೃಷ್ಟಿಯಿಂದ, ದಲಿತ ಸಮುದಾಯ ಯಾವತ್ತೂ ಕಾಂಗ್ರೆಸ್ ಪಕ್ಷದ ಜೊತೆಗೆ ಇರುತ್ತದೆ ಎಂದರು.
ನಾವೆಲ್ಲ ಒಟ್ಟಿಗೆ ಇರಬೇಕಾದರೆ ಆಗಾಗ ಸಮಾವೇಶಗಳನ್ನು ಮಾಡಿ, ಸರಕಾರದ ವತಿಯಿಂದ ಏನೆಲ್ಲ ಯೋಜನೆಗಳನ್ನು ದಲಿತ ಸಮುದಾಯಕ್ಕೆ ನೀಡಲಾಗಿದೆ ಎಂಬುದನ್ನು ಹೇಳಬೇಕಾಗುತ್ತದೆ. ಸಮುದಾಯದಿಂದ ಏನು ಕೇಳುತ್ತಾರೆ, ಮುಂದಿನ ಭರವಸೆಗಳನ್ನು ಕೊಡಬೇಕಾಗುತ್ತದೆ ಎಂದೂ ಅವರು ಉಲ್ಲೇಖಿಸಿದರು.
ದಲಿತ ಸಿಎಂ ಮಾಡಬೇಕು ಎಂದು ದಲಿತ ಸಂಘಟನೆಗಳ ಒತ್ತಾಯದ ಕುರಿತು ಮಾತನಾಡಿ, ಅವರು ಒತ್ತಾಯ ಮಾಡುವುದು ತಪ್ಪು ಇದೆಯೇ? ತಪ್ಪಿದೆ ಅಂದರೆ ಅದಕ್ಕೆ ಉತ್ತರ ನೀಡೋಣ. ಅಲ್ಲದೆ, ಅವರವರ ಅಭಿಪ್ರಾಯ ಹೇಳುತ್ತಾರೆ ಎಂದರು.