×
Ad

ಬೃಹತ್ ಕಾರ್ಯಕ್ರಮ, ಸಮಾರಂಭಗಳಿಗೆ ಎಸ್​ಒಪಿ : ಗೃಹ ಸಚಿವ ಜಿ.ಪರಮೇಶ್ವರ್‌

Update: 2025-06-05 13:33 IST

ಜಿ.ಪರಮೇಶ್ವರ್‌

ಬೆಂಗಳೂರು : ದೊಡ್ಡ‌ಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿ ಆಗಿರಲಿಲ್ಲ. ಮೊದಲನೇಯದಾಗಿ ಸಾವನ್ನಪ್ಪಿರುವ ಆತ್ಮಕ್ಕೆ ಶಾಂತಿ ಕೊರುತ್ತೇನೆ. ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದರು.

ಸಿಎಂ ಅ‌ವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜೆಸ್ಟ್ರೆಟಿಯಲ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ. ಅವರು ಯಾರೇ ಆಗಿರಲಿ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ವಿವರಣೆ ಮಾಡಲು ಹೋಗುವುದಿಲ್ಲ. ತನಿಖೆಯ ವರದಿ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದರು

ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಇಂತಹ ಘಟನೆಗಳು ಆಗಬಾರದು ಎಂಬ ವಿಚಾರದಲ್ಲಿ ಗೃಹ ಇಲಾಖೆಯಿಂದ ಒಂದು ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ.‌ ಇನ್ನುಮುಂದೆ ಯಾವುದೇ ದೊಡ್ಡ ಸಮಾರಂಭ, ಸಭೆ, ವಿಜಯೋತ್ಸವ ನಡೆಯುವಾಗ ಪೊಲೀಸ್ ಇಲಾಖೆಯ ನಿರ್ದೇಶನ ಏನು ಬರುತ್ತದೆ, ಅದರ ಚೌಕಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು

ಹೊಸ ಎಸ್‌ಒಪಿ ಮಾಡುತ್ತೇವೆ. ನಾವು ಕೆಲವು ಸೂಚನೆಗಳನ್ನು ಕೊಡುತ್ತೇವೆ. ಯಾವತ್ತೂ ಕೂಡ ಇಂತಹ ಘಟನೆಗಳಾಗಬಾರದು. ಅಮಾಯಕರ ಸಾವುಗಳು ಆಗಬಾರದು. ಇದೆಲ್ಲವನ್ನು ನೋಡಿದಾಗ ನೋವಾಗುತ್ತದೆ. ನಿನ್ನೆ ಶವಗಾರದಲ್ಲಿ ನೋಡಿದಾಗ ದುಃಖವಾಯಿತು. 20-25 ವರ್ಷ ವಯಸ್ಸಿನವರು ಸಂತೋಷದಿಂದ ಆಚರಣೆಗೆ ಬಂದಾಗ ಜೀವವನ್ನೇ‌ ಕಳೆದುಕೊಂಡಿದ್ದಾರೆ. ಇದೆಲ್ಲವನ್ನು ಯಾರು ಊಹೆ ಮಾಡಿರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಿ ಲೋಪವಾಗಿದೆ ಎಂಬುದನ್ನು ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

ಒಬ್ಬ ವ್ಯಕ್ತಿ ತನಗಿದ್ದ ಒಬ್ಬ ಮಗನನ್ನ ಕಳೆದಕೊಂಡ ಬಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಹೇಳಿಕೊಂಡರು. ಮಗ ಕಾಲೇಜಿಗೆ ಹೋಗುವುದಾಗಿ ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟಿದ್ದ. ಈ ರೀತಿಯಾಗಿದೆ. ಇದನ್ನು ಯಾರು ಕೂಡ ಊಹಿಸಿರಲಿಲ್ಲ. 34 ಸಾವಿರ ಸೀಟುಗಳ ಸಾಮರ್ಥ್ಯ ಇರುವ ಸ್ಟೇಡಿಯಂಗೆ 3 ಲಕ್ಷ‌ ಜನ ಬಂದಿದ್ದರು ಎಂದು ಹೇಳಿದರು.

ಮೆಟ್ರೋ ಸಂಸ್ಥೆಯವರು ನೀಡಿರುವ ಮಾಹಿತಿ ಪ್ರಕಾರ ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 ಗಂಟೆವರೆಗೆ 8.7 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣ‌ ಮಾಡಿದ್ದಾರೆ. ತನಿಖೆಯ ವರದಿ ಬರುವವರೆಗೂ ಏನನ್ನು ಹೇಳುವುದಿಲ್ಲ‌. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘಟನೆ ನಡೆದ ಸ್ಥಳ‌ ಪರಿಶೀಲನೆ ಮಾಡುತ್ತೇನೆ. ಆರ್‌ಸಿಬಿ, ಕೆಎಸ್‌ಸಿಎ ಅವರೊಂದಿಗೆ ಸಭೆ ಮಾಡುತ್ತೇನೆ. ತಾಂತ್ರಿಕವಾಗಿ ಏನೇ ಇದ್ದರೂ ಸಹ ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News