×
Ad

ಕಾಂತಾರ ಚಿತ್ರತಂಡ ಷರತ್ತು ಉಲ್ಲಂಘಿಸಿದ್ದರೆ ಕ್ರಮ : ಈಶ್ವರ್ ಖಂಡ್ರೆ

Update: 2025-01-20 19:22 IST

 ಈಶ್ವರ್ ಖಂಡ್ರೆ

ಬೆಂಗಳೂರು : ಹಾಸನಯ ಯಸಳೂರು ವಲಯದ ಶನಿವಾರಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದರು.

ಆದರೆ, ಕಾಂತಾರ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಮತ್ತು ಕ್ರಮ ಜರುಗಿಸಲು ಸೂಚಿಸಿದ್ದೇನೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಇನ್ನು ಟಾಕ್ಸಿಕ್ ಚಿತ್ರತಂಡಕ್ಕೆ, ಎಚ್‍ಎಂಟಿಯಿಂದ ಭೂಮಿ ಖರೀದಿಸಿರುವ ಕೆನರಾ ಬ್ಯಾಂಕ್ ಗುತ್ತಿಗೆ ನೀಡಿದ್ದು, ಮೂರೂ ಸಂಸ್ಥೆ ಮೇಲೆ ಎಫ್‍ಐಆರ್ ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಘನ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಇದರ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News