ರೋಗಿಗಳಿಗೆ ಉಚಿತ ಔಷಧಿ ನೀಡಲು ಸರಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರ ತೆರವು : ದಿನೇಶ್ ಗುಂಡೂರಾವ್
ಬೆಂಗಳೂರು : ಸರಕಾರಿ ಆಸ್ಪತ್ರಗಳಿಗೆ ಬರುವ ರೋಗಿಗಳು ಉಚಿತವಾಗಿ ಔಷಧಿಯನ್ನು ಪಡೆಯಬೇಕು. ಹೀಗಾಗಿ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರ ಸರಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ. ರಾಜ್ಯದಲ್ಲಿ ಇನ್ನು 1,220 ಜನೌಷಧಿ ಕೇಂದ್ರಗಳಿವೆ. ಅವುಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ತಕ್ಷಣಕ್ಕೆ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿ ಎಂದು ಹೇಳಿಲ್ಲ ಎಂದು ಅವರು ಹೇಳಿದರು.
ಸರಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರ ಸ್ಥಾಪಿಸಲು ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವಗಳನ್ನು ತಿರಸ್ಕರಿಸಲಾಗಿದೆ. ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ, ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಕೆಲವು ಕೇಂದ್ರಗಳು ಇತ್ತೀಚೆಗೆ ಆರಂಭವಾಗಿದ್ದು, ಅವರು ಸಾಕಷ್ಟು ಬಂಡವಾಳ ಹೂಡಿರುತ್ತಾರೆ. ಅವರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಅವರ ಒಪ್ಪಂದ ಮುಗಿದ ಬಳಿಕವೇ ಸ್ಥಗಿತಗೊಳಿಸುವ ಕುರಿತು ಆಲೋಚಿಸಲಾಗಿದೆ ಎಂದು ಅವರು ತಿಳಿಸಿದರು.
ಜನೌಷಧಿ ಕೇಂದ್ರಗಳಲ್ಲಿ ಜನರಿಕ್ ಮೆಡಿಸಿನ್ ಮಾತ್ರ ಮಾರಾಟ ಮಾಡಬೇಕು. ಆದರೆ ಹಲವು ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಮೆಡಿಸಿನ್ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಔಷಧ ನಿಯಂತ್ರಣ ಮಂಡಳಿಯವರು ಪರಿಶೀಲನೆ ನಡೆಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಸರಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳಲ್ಲಿ ಔಷಧಿಗಳ ಕೊರತೆಯಿಲ್ಲ. ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನು ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಖರೀದಿಗೆ ಅಗತ್ಯವಿರುವ ಹಣಕಾಸಿನ ಲಭ್ಯತೆಯೂ ಆಸ್ಪತ್ರೆಗಳ ಬಳಿ ಇದೆ ಎಂದು ಅವರು ತಿಳಿಸಿದರು.