×
Ad

ದಿಲ್ಲಿ ಮೀಟಿಂಗ್ | ʼರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆಯಷ್ಟೇ ಚರ್ಚೆʼ: ಊಹಾಪೋಹಗಳಿಗೆ ಕೆ.ಸಿ.ವೇಣುಗೋಪಾಲ್ ತೆರೆ

‘ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ’; ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಅಸ್ತು?

Update: 2026-05-26 19:23 IST

ಹೊಸದಿಲ್ಲಿ : ಕಾಂಗ್ರೆಸ್ ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಸರಣಿ ಸಭೆಗಳನ್ನು ನಡೆಸಿದ ಕಾಂಗ್ರೆಸ್ ಹೈಕಮಾಂಡ್ ನಾಯಕರು, ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.

ಮಂಗಳವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿ ಇಂದಿರಾಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.

ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಮಾಡುವುದಿಲ್ಲ. ಯಥಾಸ್ಥಿತಿ ಮುಂದುವರೆಯಲಿ. ರಾಜ್ಯಸಭೆಯ ನಾಲ್ಕು ಹಾಗೂ ವಿಧಾನಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕಳುಹಿಸಿ ಎಂದು ಉಭಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

ಸಂಪುಟ ಪುನರ್ ರಚನೆಗೆ ಅಸ್ತು?:

ಬಹುನಿರೀಕ್ಷಿತ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ನಾಯಕರು ಅನುಮತಿ ನೀಡಿದ್ದು, ಸಚಿವ ಸಂಪುಟದಿಂದ ಯಾರನ್ನು ಕೈ ಬಿಡಬೇಕು, ಯಾರನ್ನು ಸೇರಿಸಿಕೊಳ್ಳಬೇಕು ಎಂಬುದರ ಕುರಿತು ನೀವು ಕೂತು ಚರ್ಚೆ ಮಾಡಿ, ನಮಗೆ ತಿಳಿಸಿ. ಆನಂತರ, ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ ಮಾತುಕತೆ ನಡೆಸುವ ಮುನ್ನ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲ ಜೊತೆ ಚರ್ಚೆ ನಡೆಸಿದ್ದರು. ಆನಂತರ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.

ರಾಜ್ಯಸಭಾ-ವಿಧಾನಪರಿಷತ್ ಚುನಾವಣೆ ಕುರಿತು ಮಾತ್ರ ಚರ್ಚೆ:

ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಜ್ಯಸಭೆ ಹಾಗೂ ವಿಧಾನಪರಿಷತ್ತಿನ ಚುನಾವಣೆಗೆ ಸಂಬಂಧಪಟ್ಟಂತೆ ಮಾತ್ರ ಚರ್ಚೆ ಮಾಡಿದ್ದೇವೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಇನ್ನುಳಿದಂತೆ ಹರಿದಾಡುತ್ತಿರುವ ವಿಚಾರಗಳೆಲ್ಲ ಕೇವಲ ಊಹಾಪೋಹ ಮಾತ್ರ. ಅದರಲ್ಲಿ ಯಾವುದೆ ಸತ್ಯಾಂಶವಿಲ್ಲ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನಾನು ಈ ಚುನಾವಣೆಗಳ ಕುರಿತು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ ಎಂದು ವೇಣುಗೋಪಾಲ್ ತಿಳಿಸಿದರು.

ಪ್ರತಿಕ್ರಿಯಿಸದ ಸಿಎಂ-ಡಿಸಿಎಂ: ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಯಾವುದೆ ಪ್ರಶ್ನೆಗೂ ಪ್ರತಿಕ್ರಿಯಸದೆ, ಕಾಂಗ್ರೆಸ್ ಕಚೇರಿಯಿಂದ ಕರ್ನಾಟಕ ಭವನದತ್ತ ತೆರಳಿದರು.


ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸಿದ್ದರಾಮಯ್ಯಗೆ ಆಹ್ವಾನ?

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದೆ ಎನ್ನಲಾಗುತ್ತಿದೆ. ಈ ಸಂಬಂಧ ಮಂಗಳವಾರ ತಮ್ಮ ಆಪ್ತ ಸಚಿವರೊಂದಿಗೆ ನಡೆಸಿದ ಉಪಹಾರ ಸಭೆಯಲ್ಲಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ತನಗೆ ರಾಷ್ಟ್ರ ರಾಜಕಾರಣದತ್ತ ಆಸಕ್ತಿ ಇಲ್ಲ. ಯಾವುದೆ ಕಾರಣಕ್ಕೂ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೈಕಮಾಂಡ್‍ಗೆ ತಿಳಿಸಿರುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News