ಚಲನಶೀಲ ಸಮಾಜದಿಂದ ಮಾತ್ರ ಜಾತಿ ವ್ಯವಸ್ಥೆಗೆ ಮುಕ್ತಿ: ಸಿಎಂ ಸಿದ್ದರಾಮಯ್ಯ
ಕಲ್ಲೆ ಶಿವೋತ್ತಮ ರಾವ್ ಅವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ
Photo credit: X/@CMofKarnataka
ಬೆಂಗಳೂರು: ಜಾತಿ ವ್ಯವಸ್ಥೆಗೆ ಜಡತ್ವ ಇದ್ದು, ಬಸವಣ್ಣ, ಬುದ್ಧ, ಗಾಂಧಿ, ಅಂಬೇಡ್ಕರ್ ಸೇರಿ ಯಾರು ಹೇಳಿದರೂ ಈ ದೇಶದಲ್ಲಿ ಜಾತಿ ವ್ಯವಸ್ಥೆ ನಾಶವಾಗಿಲ್ಲ. ಹೀಗಾಗಿ ಚಲನಶೀಲ ಸಮಾಜದಿಂದ ಮಾತ್ರ ಜಾತಿ ವ್ಯವಸ್ಥೆಗೆ ಮುಕ್ತಿ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೆ ಜನ್ಮದಿನಾಚರಣೆ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ ವ್ಯವಸ್ಥೆ ನಾಶವಾಗಲು ಚಲನೆ ಸಿಗಲು ಆರ್ಥಿಕ, ಸಾಮಾಜಿಕ ಬದಲಾವಣೆಗಳು ಆಗಬೇಕು. ಇಲ್ಲದಿದ್ದರೇ ಚಲನತಹಿತವಾಗಿರುತ್ತದೆ. ಜಾತಿ ವ್ಯವಸ್ಥೆ ಅಷ್ಟು ಸುಲಭವಾಗಿ ಹೋಗುವುದಿಲ್ಲ. ಇದಕ್ಕೆ ನೀರೆರೆಯುವ ಸಮಾಜಿಕ ಪಟ್ಟಭದ್ರ ಹಿತಾಸಕ್ತರು ಸಮಾಜದಲ್ಲಿ ಇದ್ದಾರೆ. ಇದು ಬದಲಾಗಲು ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳು ಹಾಗೂ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಬರಬೇಕು. ಇದು ಬಾರದೇ ಜಾತಿ, ವರ್ಗ ವ್ಯವಸ್ಥೆ ಹೋಗುವುದಿಲ್ಲ. ಅರಸು ಅವರು ದಲಿತರು, ಬಡವರು, ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಿದ್ದಾರೆ ಎಂದು ಅವರು ತಿಳಿಸಿದರು.
ದೇವರಾಜ ಅರಸು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು. ದೇವರಾಜ ಅರಸು ಎಂಟು ವರ್ಷಗಳ ಕಾಲ ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಅವರ ನಂತರ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದು ನಾನೇ. ಅವರಂತೆ ನಾನೂ ಮುಖ್ಯಮಂತ್ರಿಯಾಗಿ 5 ವರ್ಷಗಳನ್ನು ಪೂರೈಸಿದ್ದೇನೆ. ಈ ವಿಚಾರದಲ್ಲಿ ನಮ್ಮಿಬ್ಬರಿಗೂ ಸಾಮ್ಯತೆ ಇದೆ ಎಂದು ಅವರು ಹೇಳಿದರು.
ದೇವರಾಜ ಅರಸು ಆರ್ಥಿಕ, ಸಾಮಾಜಿಕ ಸಮಾನತೆಯನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರು. ಅವರು ಮುಖ್ಯಮಂತ್ರಿಯಾದಾಗ ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕೆಂದು ಪ್ರತಿಪಾದಿಸಿದ್ದರು. ಹೀಗಾಗಿ ಜಾತಿ, ವರ್ಗ ವ್ಯವಸ್ಥೆಯಿರುವ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ-ಸಾಮಾಜಿಕ ಶಕ್ತಿ, ಸ್ವಾವಲಂಬನೆ ಬರಬೇಕು. ಅಲ್ಲಿಯವರೆಗೆ ಜಾತಿ, ವರ್ಗ ಯಾವುದೂ ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ವಿರೋಧದ ನಡುವೆಯೂ ಭೂ ಸುಧಾರಣೆ ಕಾಯ್ದೆಯ ಉಳುವವನಿಗೆ ಭೂಮಿ ಎನ್ನುವ ಕಾನೂನನ್ನು ಜಾರಿ ಮಾಡುವುದು ಸುಲಭದ ಮಾತಾಗಿರಲಿಲ್ಲ. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದವರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಜಾರಿ ಮಾಡಿದ್ದನ್ನು ಮೆಚ್ಚಲೇಬೇಕಾದ ಕೆಲಸವಾಗಿದೆ. ವಿಧಾನಸೌಧ ಕೆಲವೇ ಜನರ ಪ್ರಾತಿನಿಧಿಕ ಸಭೆಯಾಗಿರುವುದನ್ನು ಮನಗಂಡ ಅರಸು ಹಿಂದುಳಿದವರೂ ವಿಧಾನಸೌಧದ ಮೆಟ್ಟಿಲನ್ನು ಹತ್ತುವಂತೆ ಮಾಡಿದರು. ಜೀತಪದ್ಧತಿ ಹಾಗೂ ಮಲಹೊರುವ ಪದ್ಧತಿ ನಿಷೇಧ, ಋಣಪರಿಹಾರ ಕಾಯ್ದೆ ಜಾರಿಗೆ ತಂದರು ಎಂದು ಅವರು ತಿಳಿಸಿದರು.
ಅಕ್ಕಿ ಬಳಸುವುದೂ ಶ್ರೀಮಂತರ ಸ್ವತ್ತಾಗಿದ್ದ ಕಾಲದಲ್ಲಿ, ಹಿಂದುಳಿದವರಿಗೆ ಅನ್ನವೂ ಉಣ್ಣುವ ಪರಿಸ್ಥಿತಿಯಿರಲಿಲ್ಲ. ರಾಜ್ಯದಲ್ಲಿ ಯಾರೊಬ್ಬರೂ ಅನ್ನಕ್ಕಾಗಿ ಕೈಒಡ್ಡಬಾರದೆಂಬ ಸದುದ್ದೇಶದಿಂದ ಅನ್ನಭಾಗ್ಯ ಯೋಜನೆಗೆಯನ್ನು ನಾನು ಜಾರಿಗೆ ತಂದೆನು. ಪ್ರಸ್ತುತ ಅನ್ನಭಾಗ್ಯಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹಲವು ಟೀಕೆಗಳು ಕೇಳಿಬಂದವು. ಬಡವರಿಗೆ ತಿಂಗಳಿಗೆ 5 ರಿಂದ 6 ಸಾವಿರ ನೀಡುತ್ತಿರುವುದು ಅಭಿವೃದ್ಧಿಯಲ್ಲವೇ? ಹೆಣ್ಣುಮಕ್ಕಳಿಗೆ ಸ್ವಾವಲಂಬನೆ ನೀಡುವ ಉದ್ದೇಶದಿಂದ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. 2013-14ರಲ್ಲಿ 1,04,000 ರೂ. ಇದ್ದ ತಲಾದಾಯ, 2024-25ರಲ್ಲಿ 2,05,000 ರೂ.ಗಳಾಗಿದೆ. ಇಡೀ ದೇಶದಲ್ಲಿ ಕರ್ನಾಟಕ ತಲಾ ಆದಾಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಇಂತಹ ಸಾಧನೆ ಸಾಧ್ಯವಾಗಿದೆ ಎಂದು ಅವರು ವಿವರಿಸಿದರು.
ದೇವರಾಜ ಅರಸು ಅವರ ಹೆಸರಿನಲ್ಲಿ ಸರಕಾರ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ವರ್ಷ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರು ಆಯ್ಕೆಯಾಗಿರುವುದು ಸಂತೋಷದ ವಿಚಾರ. ಅವರಿಗೆ ಬಹಳ ಹಿಂದೆಯೇ ಈ ಪ್ರಶಸ್ತಿ ದೊರೆಯಬೇಕಿತ್ತು. ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿರುವುದು ನನಗೆ ಅತೀವ ಸಂತಸ ತಂದಿದೆ. ಕಲ್ಲೆ ಶಿವೋತ್ತಮ ರಾವ್ ಅವರೂ ಸಮಾಜವಾದಿ ಹಿನ್ನೆಲೆಯಿಂದ ಬಂದವರು. ಅನೇಕ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದು, ಸರಕಾರವನ್ನು ಯಾವುದೇ ಮುಲಾಜಿಲ್ಲದೇ ನೇರವಾಗಿ ಟೀಕಿಸುತ್ತಿದ್ದರು. ನನ್ನನ್ನೂ ಟೀಕಿಸಿದ್ದಾರೆ ಎಂದು ಅವರು ಹೇಳಿದರು.
ದೇವರಾಜ ಅರಸು ಪ್ರಶಸ್ತಿಯನ್ನು ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಪ್ರದಾನ ಮಾಡಲಾಯಿತು. ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್, ಗ್ಯಾರಂಟಿ ಯೋಜನೆಗಳ ರಾಜ್ಯ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನವೂ ಇಂದೇ ಆಗಿದೆ. ಅವರು ಭಾರತವನ್ನು 21ನೆ ಶತಮಾನಕ್ಕೆ ಕೊಂಡಯ್ಯಲು ಪ್ರಯತ್ನಿಸಿದ ಮೇರು ನಾಯಕರಾಗಿದ್ದರು. ಮಹಿಳೆಯರಿಗೆ, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತರಲು ಸಂವಿಧಾನದಲ್ಲಿ ತಿದ್ದುಪಡಿ ತಂದರು. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ರಾಜೀವ್ ಗಾಂಧಿಯವರೇ ಮೂಲ ಕಾರಣ. ಸಮಾಜದ ಪರಿವರ್ತನೆಗೆ ಶ್ರಮವಹಿಸಿರುವವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ದೇವರಾಜ್ ಅರಸ್ ಹಾಗೂ ರಾಜೀವ್ ಗಾಂಧಿಯಂತಹ ಮಹಾನ್ ಚೇತನಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಾಗಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಡಿ.ದೇವರಾಜ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು.
— CM of Karnataka (@CMofKarnataka) August 20, 2025
ಅರಸು ಅವರು ಎಂಟು ವರ್ಷಗಳ ಕಾಲ ಈ ರಾಜ್ಯದ… pic.twitter.com/Cr6Wa4EamJ