ಕಾವೇರಿ ನೀರಿನ ವಿಚಾರ | ಬೆಂಗಳೂರಿನಲ್ಲಿ ‘ಕರ್ನಾಟಕ ಬಂದ್’ಗೆ ನೀರಸ ಪ್ರತಿಕ್ರಿಯೆ

Update: 2026-08-13 19:16 IST

ಬೆಂಗಳೂರು : ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಯ್ಲೂಆರ್‍ಸಿ) ನೀಡಿದ ಆದೇಶವನ್ನು ಖಂಡಿಸಿ ಕನ್ನಡ ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಕರ್ನಾಟಕ ಬಂದ್’ಗೆ ನಗರದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎಂದಿನಂತೆ ಗುರುವಾರದಂದು ನಗರದಲ್ಲಿ ಚಿತ್ರಮಂದಿರಗಳು, ಅಂಗಡಿ, ಹೋಟೆಲ್‍ಗಳು, ಬಾರ್ ಮತ್ತು ಮಾಲ್‍ಗಳು ತೆರೆದ್ದವು. ಶಾಲಾ-ಕಾಲೇಜುಗಳಿಗೆ ರಜೆ ಇರಲಿಲ್ಲ, ಯಾವುದೇ ಅಡೆತಡೆ ಇಲ್ಲದೆ ತರಗತಿಗಳು ನಡೆದಿವೆ. ಆಸ್ಪತ್ರೆಗಳು ಮತ್ತು ಔಷಧ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಬ್ಯಾಂಕುಗಳ ಸೇವೆಯಲ್ಲೂ ಯಾವುದೇ ವ್ಯತ್ಯಯವಾಗಲಿಲ್ಲ. ಸರಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್‍ಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ಮಂದಿ ಬಸ್‍ಗಳಲ್ಲಿ ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಬಸ್ ಸಂಚಾರದಲ್ಲಿ ಯಾವುದೇ ದೊಡ್ಡ ವ್ಯತ್ಯಯ ಕಂಡುಬರಲಿಲ್ಲ. ನಗರದ ರಸ್ತೆಗಳಲ್ಲೂ ವಾಹನ ದಟ್ಟಣೆ ಎಂದಿನಂತೆ ಸಾಮಾನ್ಯವಾಗಿತ್ತು. ಮೆಟ್ರೋ, ಆಟೋ, ಟ್ಯಾಕ್ಸಿ ಸೇರಿದಂತೆ ಸಾರಿಗೆ ವ್ಯವಸ್ಥೆ ಸಹಜವಾಗಿಯೇ ಕಾರ್ಯನಿರ್ವಹಿಸಿವೆ.

ಇನ್ನು ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಟೌನ್‍ಹಾಲ್, ಕೆ.ಆರ್. ಮಾರುಕಟ್ಟೆ, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಟೌನ್‍ಹಾಲ್‍ನಲ್ಲಿ ನಾಲ್ಕು ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಿ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿತ್ತು.

ವಾಟಾಳ್ ಸೇರಿದಂತೆ 14 ಮಂದಿ ವಶ: ಕರ್ನಾಟಕ ಬಂದ್‍ಗೆ ಕರೆ ನೀಡಿದ್ದ ಹಿನ್ನಲೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಸೇರಿದಂತೆ 14 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಯಿತು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆ ವಾಟಾಳ್ ನಾಗರಾಜ್ ಅವರನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ವಶಕ್ಕೆ ಪಡೆಯುವಾಗ, ಅವರು ಮನೆಯಿಂದ ಆಚೆ ಬರುವುದಿಲ್ಲ ಎಂದು ಅವರು ಪಟ್ಟು ಹಿಡಿದ ಪ್ರಸಂಗ ನಡೆಯಿತು.

ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಹಾಗೂ ಎಸಿಪಿ ತನ್ವೀರ್ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಸುಮಾರು ಅರ್ಧ ಗಂಟೆಗಳ ಕಾಲ ವಾಟಾಳ್ ಅವರ ಮನವೊಲಿಸಲು ಪ್ರಯತ್ನಿಸಿತು. ಆದರೆ, ಸರ್ಕಾರದ ನಡೆಗೆ ತೀವ್ರ ಆಕ್ರೋಶ ಹೊರಹಾಕಿದ ವಾಟಾಳ್, ಅಧಿಕಾರಿಗಳ ವಿನಂತಿಗೆ ಜಗ್ಗಲಿಲ್ಲ. ಕೊನೆಗೆ ಸ್ಥಳದಲ್ಲೇ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಆದರೆ ಅವರು ತಮ್ಮ ಬಾಯಿಗೆ ಸೆಲೋಟೇಪ್ ಅಂಟಿಸಿಕೊಳ್ಳುವ ಮೂಲಕ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಟೌನ್‍ಹಾಲ್‍ಗೆ ಪ್ರತಿಭಟನೆಗೆ ತೆರಳುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಫ್ರೀಡಂ ಪಾರ್ಕ್ ಬಳಿ ಬಿಡಲಾಯಿತು. 

‘ಕರ್ನಾಟಕ ಬಂದ್ ಯಶಸ್ವಿಯಾಗದಂತೆ ರಾಜ್ಯ ಸರಕಾರವೇ ಪೊಲೀಸರನ್ನು ಬಳಸಿಕೊಂಡು ಅಡ್ಡಿಪಡಿಸಿದೆ. ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಂದ್ ನಡೆಸುವುದಾಗಿ ಘೋಷಿಸಿದ್ದರೂ, ಪ್ರತಿಭಟನೆ ನಡೆಸಲು ಪೊಲೀಸರು ನಮಗೆ ಅವಕಾಶ ನೀಡಲಿಲ್ಲ’

-ವಾಟಾಳ್ ನಾಗರಾಜ್, ಕನ್ನಡ ಒಕ್ಕೂಟದ ಅಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News