×
Ad

ರಾಜ್ಯ ಬಜೆಟ್‌-2025 | ಕೃಷಿ, ತೋಟಗಾರಿಕೆ, ರೇಷ್ಮೆ ಅಭಿವೃದ್ದಿಗೆ ಘೋಷಿಸಿರುವ ಕೊಡುಗೆಗಳೇನು? ಇಲ್ಲಿದೆ ಮಾಹಿತಿ

Update: 2025-03-07 15:08 IST

ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2025-06ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಕೃಷಿ, ತೋಟಗಾರಿಗೆ, ರೇಷ್ಮೆ ಅಭಿವೃದ್ದಿಗೆ ಘೋಷಿಸಿರುವ ಕೊಡುಗೆಗಳ ವಿವರ ಇಂತಿವೆ.

ಕೃಷಿ ಕ್ಷೇತ್ರಕ್ಕೆ ಆಧುನಿಕತೆಯ ಸ್ಪರ್ಶ :

► ಜಾಗತಿಕ ಮಟ್ಟದಲ್ಲಿ ಡಿಜಿಟಲ್‌, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.

► 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ.

► ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನ.

► ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಅನುದಾನ.

► ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

► ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000 ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.

► ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.

► ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನ.

► ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.

► ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.

► ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.

► ಜೈವಿಕ ಕೃಷಿ ಪರಿಕರ ಸ್ಟಾರ್ಟ್‌-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.

► ವಿಶ್ವ ಬ್ಯಾಂಕ್‌ ನೆರವಿನ ರಿವಾರ್ಡ್‌ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.

► ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.

► ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ತಳಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ (Phenotyping) ಸೌಲಭ್ಯ ಕಲ್ಪಿಸಲಾಗುವುದು.

► ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪಿಸಲಾಗುವುದು.

► ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.

► ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ತೋಟಗಾರಿಕೆ : 

►‌ ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

► ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೇಸ್‌ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲಾಗುವುದು.

► ರಾಜ್ಯದ 20 GI ಟ್ಯಾಗ್‌ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್‌ ಸ್ಥಾಪಿಸಲಾಗುವುದು.

►ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್‌ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.

► ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು.

► ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.

► ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನವನ್ನು ಒದಗಿಸಲಾಗುವುದು.

► ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ.

► ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರೇಷ್ಮೆ :

► ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.

► ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.

►  ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು.

► ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜಿಸಲಾಗುವುದು.

► ರಾಜ್ಯದಲ್ಲಿ ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News